ಮಂಡ್ಯ: ಕಬ್ಬಿನ ದರ ನಿಗದಿ ಹಾಗೂ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸುವ ನಿಯಮ ಕೈ ಬಿಡುವಂತೆ ಆಗ್ರಹಿಸಿ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್ನಲ್ಲಿ ರಾಜ್ಯ ರೈತ ಸಂಘದಿಂದ ಸೋಮವಾರ ಹಕ್ಕೊತ್ತಾಯ ಸಮಾವೇಶ ಆಯೋಜಿಸಲಾಗಿತ್ತು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಂಘಟನೆಯ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸರ್ಎಂವಿ ಪ್ರತಿಮೆಯಿಂದ ಪಾರ್ಕ್ವರೆಗೆ ಮೆರವಣಿಗೆ ನಡೆಸಿದರು. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಯಿತು. ಪ್ರತಿ ಟನ್ ಕಬ್ಬಿಗೆ 4,500 ರೂ ದರ ನಿಗದಿ ಮಾಡಬೇಕು. ಒಂದು ಲೀಟರ್ ಹಾಲಿಗೆ 40 ರೂ ಕೊಡಬೇಕು. ಕೆಆರ್ಎಸ್ ಡ್ಯಾಂ ಸುತ್ತಮುತ್ತ 25 ಕಿ.ಮೀ ವ್ಯಾಪ್ತಿಯಲ್ಲಿ ಶಾಶ್ವತವಾಗಿ ಗಣಿಗಾರಿಕೆ ನಿಷೇಧಿಸಬೇಕು. ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಕೆ ಮಾಡುವ ನಿಯಮ ಕೈ ಬಿಡಬೇಕು. ಈ ಬೇಡಿಕೆಯನ್ನು ಒಂದು ವಾರದೊಳಗೆ ಈಡೇರಿಸದಿದ್ದರೆ ಮೈಸೂರು ದಸರಾ ಹಬ್ಬದಂದು ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಬಂದ್ ಮಾಡುವ ಎಚ್ಚರಿಕೆ ನೀಡಿದರು. ಸಮಾವೇಶದಲ್ಲಿ ತೆಗೆದುಕೊಂಡ 20 ಹಕ್ಕೊತ್ತಾಯವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ರವಾನಿಸಲಾಯಿತು.
ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲಿ ಪಾಟೀಲ್, ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಸುನೀತಾ ಪುಟ್ಟಣ್ಣಯ್ಯ, ಎ.ಎಲ್.ಕೆಂಪೂಗೌಡ, ಎಸ್.ಸಿ.ಮಧುಚಂದನ್, ವೀರಸಂಗಯ್ಯ, ಮಲೇನೂರು ಶಂಕರಪ್ಪ, ಲಿಂಗಪ್ಪಾಜಿ ಇತರರಿದ್ದರು.