ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಶಾಸಕರು ಹಾಗೂ ಸಂಸದರು ಒಟ್ಟಾಗಿ ಪಕ್ಷಾತೀತವಾಗಿ ಸರ್ಕಾರದ ಗಮನ ಸೆಳೆಯುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಆಗ್ರಹಿಸಿ ಸಂತ್ರಸ್ತರ ಹೋರಾಟ ಸಮಿತಿ ಬಾಗಲಕೋಟೆಯಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಸೋಮವಾರ ಪಾಲ್ಗೊಂಡು ಬೆಂಬಲ ಸೂಚಿಸಿ ಅವರು ಮಾತನಾಡಿದರು.
ಆಲಮಟ್ಟಿ ಜಲಾಶಯದ ಎತ್ತರವನ್ನು 524.256 ಮೀಟರ್ಗೆ ಎತ್ತರಿಸುವುದರಿಂದ ಉಭಯ ಜಿಲ್ಲೆಗಳಷ್ಟೇ ಅಲ್ಲ, ಉತ್ತರ ಕರ್ನಾಟಕದ ಎಂಟು ಜಿಲ್ಲೆಗಳಿಗೂ ಅನುಕೂಲವಾಗಲಿದೆ. 16 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ. ಇದರಿಂದ ರೈತರ ಬಾಳು ಹಸನಾಗಲಿದೆ. ಎರಡೂ ಜಿಲ್ಲೆಗಳ 18 ಜನ ಶಾಸಕರು ಪಕ್ಷಾತೀತವಾಗಿ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದರು.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಯೋಜನೆಗೆ ಬೇಕಾದ ಹಣವನ್ನು ಬಿಡುಗಡೆ ಮಾಡಬೇಕು. ಆಲಮಟ್ಟಿ ಜಲಾಶಯ ಎತ್ತರದಿಂದ ಸಂತ್ರಸರಾಗುವ 22 ಗ್ರಾಮಸ್ಥರು ಮತ್ತು 1.30 ಲಕ್ಷ ಎಕರೆ ರೈತರ ಜಮೀನು ಭೂಸ್ವಾಧೀನಕ್ಕೆ ಏಕರೂಪ ಪರಿಹಾರ ನೀಡಬೇಕು. ನ್ಯಾಯಯುತವಾಗಿರುವ ಈ ಯೋಜನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಡಿ.12ರಂದು ಸಂಜೆ 4 ಕ್ಕೆ ಈ ಭಾಗದ ಶಾಸಕರು, ಸಂಸದರ ಸಭೆ ಕರೆದಿದ್ದಾರೆ. ನಾವೆಲ್ಲ ಶಾಸಕರು ಪಕ್ಷಾತೀತವಾಗಿ ಸಂತ್ರಸ್ತರ ದನಿಯಾಗಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಿದ್ದೇವೆ. ಅಲ್ಲದೇ, ಪ್ರಾಮಾಣಿಕವಾಗಿ ಸರ್ಕಾರದ ಗಮನ ಸೆಳೆಯುತ್ತೇವೆ ಎಂದರು.
ಗದುಗಿನ ತೋಂಟದಾರ್ಯ ಸ್ವಾಮೀಜಿ, ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಮಾಜಿ ಸಚಿವರಾದ ಅಜಯಕುಮಾರ ಸರನಾಯಕ, ಎಸ್. ಆರ್. ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಅದೃಶ್ಯಪ್ಪ ದೇಸಾಯಿ, ನಾಗರಾಜ ಹದ್ಲಿ ಮತ್ತಿತರರಿದ್ದರು.