ಬೆಂಗಳೂರು : ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ, ಸಾಯಿ ಡೆವಲಪರ್ಸ್ ಮಾಲೀಕರಾಗಿರುವ ಪ್ರಭಾಕರ್ ರೆಡ್ಡಿ ಅವರು ನಿನ್ನೆ ತಡರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ಸೇರಿಸಲಾಗಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.
ನಿನ್ನೆ ತಡರಾತ್ರಿ ತಮ್ಮ ಆರ್.ಆರ್.ನಗರದ ಮನೆಯಲ್ಲಿ ಫಿನಾಯಿಲ್ ಕುಡಿದ ಉದ್ಯಮಿ ಪ್ರಭಾಕರ್ ರೆಡ್ಡಿ ಅವರು, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಸ್ಪರ್ಶ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಇದನ್ನೂ ಓದಿ: ಹೂಡಿಕೆ ಹಣ ಹಿಂತಿರುಗಿಸುವಂತೆ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರರ ಪ್ರತಿಭಟನೆ
ರಿಯಲ್ ಎಸ್ಟೇಟ್ ಉದ್ಯಮಿಯಾದ ರೆಡ್ಡಿ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಎರಡು ದಿನದ ಹಿಂದೆ ಅವರು, 40,000 ಆಹಾರ ಕಿಟ್ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿದ್ದರು ಎನ್ನಲಾಗಿದೆ.
ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಯತ್ನ ನಡೆಸಿದ್ದಾರೆಂದು ಶಂಕಿಸಲಾಗಿದೆ. ಆರ್.ಆರ್.ನಗರ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.