ಬೆಂಗಳೂರು: ಕೋವಿಡ್ ಜಾಗೃತಿ ಫಲಕಗಳಲ್ಲಿ ಖಾಸಗಿ ಜಾಹೀರಾತು ಅಳವಡಿಸಿದ ಹಿನ್ನೆಲೆಯಲ್ಲಿ ಪಾಲಿಕೆಗೆ ಬರಬೇಕಿರುವ ಅಂದಾಜು 18 ಲಕ್ಷ ರೂ. ತೆರಿಗೆ ಹಣವನ್ನು ಸಂಬಂಧಪಟ್ಟ ಖಾಸಗಿ ಸಂಸ್ಥೆಗಳಿಂದ 1 ವಾರದೊಳಗೆ ವಸೂಲಿ ಮಾಡಬೇಕು. ಇಲ್ಲವಾದರೆ ಆ ಮೊತ್ತವನ್ನು ಸರ್ಕಾರವೇ ಬಿಬಿಎಂಪಿಗೆ ಪಾವತಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಕೋವಿಡ್ ಜಾಗೃತಿ ಜಾಹೀರಾತು ಫಲಕ ಅಳವಡಿಸಲು ಅನುಮತಿ ನೀಡುವ ವೇಳೆ ಹೈಕೋರ್ಟ್ ವಿಧಿಸಿದ್ದ ಷರತ್ತುಗಳನ್ನು ಸರ್ಕಾರ ಉಲ್ಲಂಸಿದೆ ಎಂದು ಆರೋಪಿಸಿ ವಕೀಲ ಜಿ.ಆರ್. ಮೋಹನ್ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಸಿಜೆ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಖಾಸಗಿ ಜಾಹೀರಾತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಕೋವಿಡ್ ಜಾಗೃತಿ ಫಲಕ ಅಳವಡಿಕೆಗೆ ನೀಡಿದ್ದ ಅನುಮತಿ ಹಿಂಪಡೆದಿದ್ದ ಹೈಕೋರ್ಟ್, ಎಲ್ಲ ಫಲಕಗಳನ್ನು ಶೀಘ್ರ ತೆರವುಗೊಳಿಸಬೇಕು. ಜಾಹೀರಾತು ಪ್ರದರ್ಶಿಸಿದ ಖಾಸಗಿ ಸಂಸ್ಥೆಗಳಿಂದ ಪಾಲಿಕೆಗೆ ಬೇರಬೇಕಿದ್ದ ಒಟ್ಟು 18,04,638 ರೂ. ತೆರಿಗೆ ಹಣವನ್ನು ವಸೂಲಿ ಮಾಡಿ ಬಿಬಿಎಂಪಿಗೆ ಪಾವತಿಸಬೇಕು ಹಾಗೂ ಜಾಹೀರಾತು ಅಳವಡಿಸಲು ಖಾಸಗಿ ಸಂಸ್ಥೆಗಳಿಗೆ ಅನುಮತಿ ನೀಡಿದ್ದ ಅಧಿಕಾರಿ ವಿರುದ್ಧ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಈ ಹಿಂದೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿತ್ತು. ಆದರೆ, ಸೋಮವಾರ ಅರ್ಜಿ ವಿಚಾರಣೆಗೆ ಬಂದಾಗ ಕೋರ್ಟ್ ನಿರ್ದೇಶನ ಪಾಲನೆ ಮಾಡಿದ ಕುರಿತು ಪ್ರಮಾಣಪತ್ರ ಸಲ್ಲಿಸಲು ಸರ್ಕಾರ ವಿಫಲವಾಗಿತ್ತು.
ಇದರಿಂದ, ನ್ಯಾಯಾಲಯದ ಯಾವ ನಿರ್ದೇಶನಗಳನ್ನೂ ಸರ್ಕಾರ ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಪೀಠ, 1 ವಾರದ ಒಳಗೆ ಪಾಲಿಕೆಗೆ ಬರಬೇಕಿರುವ ಅಂದಾಜು 18 ಲಕ್ಷ ತೆರಿಗೆ ಹಣವನ್ನು ಸಂಬಂಧಪಟ್ಟವರಿಂದ ವಸೂಲಿ ಮಾಡಬೇಕು. ಇಲ್ಲವಾದರೆ, ಸರ್ಕಾರವೇ ಆ ಮೊತ್ತವನ್ನು ಬಿಬಿಎಂಪಿಗೆ ಪಾವತಿಸಬೇಕು ಎಂದು ಎಚ್ಚರಿಕೆ ನೀಡಿ ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿತು. ಜತೆಗೆ, ಮುಂದಿನ ವಿಚಾರಣೆ ವೇಳೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡ ವರದಿಯನ್ನೂ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿತು.