ಮಂಡ್ಯ: ಜಿಲ್ಲಾಡಳಿತದಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜ.26ರಂದು ಆಯೋಜಿಸಿರುವ ಗಣರಾಜ್ಯೋತ್ಸವಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಣರಾಜ್ಯೋತ್ಸವವನ್ನು ಉತ್ತಮವಾಗಿ ಆಚರಿಸಲು ಎಲ್ಲ ರೀತಿಯ ಪೂರಕ ವ್ಯವಸ್ಥೆ ಮಾಡಿಕೊಳ್ಳಿ. ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಸಿಬ್ಬಂದಿಯೊಂದಿಗೆ 9 ಗಂಟೆಗೆ ಕವಾಯತು ಮೈದಾನಕ್ಕೆ ಬರಬೇಕು ಎಂದು ತಿಳಿಸಿದರು.
ಜನರಿಗೆ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲು ಆರೋಗ್ಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಶಿಕ್ಷಣ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು.ರಾಷ್ಟ್ರಗೀತೆ, ನಾಡಗೀತೆ ಹಾಗೂ ರೈತಗೀತೆಯನ್ನು ಹಾಡಿಸಲು ವ್ಯವಸ್ಥೆ ಮಾಡಿಕೊಳ್ಳಿ. ಎನ್ಎಸ್ಎಸ್, ಎನ್ಸಿಸಿ, ಭಾರತ ಸೇವಾದಳ, ಪೊಲೀಸ್ ಇಲಾಖೆ, ಗೃಹರಕ್ಷಕದಳ, ಅಬಕಾರಿ ಇಲಾಖೆ ಸಿಬ್ಬಂದಿ ಪಥಸಂಚಲನ ನಡೆಸಲು ಪೂರ್ವ ಅಭ್ಯಾಸ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಟಿ.ಎನ್.ಧನಂಜಯ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಾಮಣಿ, ಅಗ್ನಿಶಾಮಕ ಅಧಿಕಾರಿ ಕೆ.ಪಿ.ಗುರುರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕ ಓಂಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಉದಯಕುಮಾರ್, ಕೌಶಲಾಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀನಿವಾಸ್ ಇತರರಿದ್ದರು.