ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಿರು ನೀರಾವರಿ ಇಲಾಖೆ ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಎನ್.ಟಿ.ರಾಜಗೋಪಾಲ್ಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 6 ವರ್ಷಗಳ ಸಾದಾ ಸಜೆ ಹಾಗೂ 2.50 ಕೋಟಿ ರೂ. ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.
ರಾಜಗೋಪಾಲ್ ವಿರುದ್ಧ ಲೋಕಾಯುಕ್ತ ಮಂಗಳೂರು ಪೊಲೀಸ್ ಠಾಣೆಯಲ್ಲಿ 2010ರ ಮಾ.17ರಂದು ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕ ಸದಾನಂದ ಎಂ.ವರ್ಣೇಕರ್ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ತೀರ್ಪು ನೀಡಿದ್ದು, ಲಂಚ ನಿರೋಧ ಕಾಯ್ದೆ 1988 ಕಲಂ 13(1)(ಇ) ಹಾಗೂ 13(2)ರಂತೆ 6 ವರ್ಷಗಳ ಸಾದಾ ಸಜೆ ಹಾಗೂ 2.50 ಕೋಟಿ ರೂ. ದಂಡ, ದಂಡ ಕಟ್ಟಲು ವಿಫಲವಾದರೆ ಮತ್ತೆ 1 ವರ್ಷ, 6 ತಿಂಗಳ ಸಾದಾ ಸಜೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
ಎನ್.ಟಿ.ರಾಜಗೋಪಾಲ್ 2016ರ ಅ.30ರಂದು ಯಾದಗಿರಿ ಜಿಲ್ಲೆಯ ಪಂಚಾಯತ್ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ ಸೇವೆಯಿಂದ ನಿವೃತ್ತಿಗೊಂಡಿದ್ದು, ಪ್ರಸ್ತುತ ಮಂಗಳೂರು ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಸರ್ಕಾರದ ಪರವಾಗಿ ಮಂಗಳೂರಿನ ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ವಾದ ಮಂಡಿಸಿದ್ದರು.