ಯಳಂದೂರು: ವನ್ಯಜೀವಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಪಟ್ಟಣದ ಎಸ್ಬಿಎಂ ವೃತ್ತದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಸ್ತೆ ಸಂಚಾರ ತಡೆ ನಡೆಸಲಾಯಿತು.
ರೈತ ಮುಖಂಡ ಗೌಡಹಳ್ಳಿ ಸೋಮಣ್ಣ ಮಾತನಾಡಿ, ಹನೂರು ತಾಲೂಕಿನ ಲೊಕ್ಕನಹಳ್ಳಿ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಕಾಡುಪ್ರಾಣಿಗಳು ಬೆಳೆಗಳನ್ನು ಹಾಳು ಮಾಡುತ್ತಿದ್ದರೂ ಅರಣ್ಯ ಇಲಾಖೆ ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದು ದೂರಿದರು. ಬೇಸಿಗೆ ಹಿನ್ನೆಲೆಯಲ್ಲಿ ಕಾಡುಪ್ರಾಣಿಗಳು ನೀರು, ಮೇವನ್ನು ಹುಡುಕಿಕೊಂಡು ನಾಡಿನತ್ತ ಬರುತ್ತಿದ್ದು, ರೈತರ ಫಸಲುಗಳನ್ನು ನಾಶ ಮಾಡುತ್ತಿವೆ. ಈ ಸಂಬಂಧ ಲೊಕ್ಕನಹಳ್ಳಿಯಲ್ಲಿ ರೈತರು ಕಳೆದ 3 ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದಲಿಂಗಸ್ವಾಮಿ, ಕಾರ್ಯದರ್ಶಿ ಅಂಬಳೆ ಶಿವಕುಮಾರ್, ಪುಟ್ಟಮಾದಪ್ಪ, ಸ್ವಾಮಿಗೌಡ್, ಕುಮಾರ್, ಮಹೇಶ್ ಇತರರು ಹಾಜರಿದ್ದರು.