ಮುಂಬೈ: ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿದ ಬಿಸಿಸಿಐ ಇದೀಗ 2024ರಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ಗೆ ತಯಾರಿ ಆರಂಭಿಸಿದೆ. ಇತ್ತ ಮುಂಬೈ ಇಂಡಿಯನ್ಸ್ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರನ್ನು ಕ್ಯಾಪ್ಟನ್ ಆಗಿ ನೇಮಿಸುವ ಮೂಲಕ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.
ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿದ ಬಳಿಕ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದ ಮುಂಬೈ ಇಂಡಿಯನ್ಸ್ ಸಾಮಾಜಿಕ ಜಾಲತಾಣದಲ್ಲಿ ಫಾಲೋವರ್ಸ್ಅನ್ನು ಕಳೆದುಕೊಂಡಿತ್ತು. ಆದರೆ, ಇದೀಗ ರೋಹಿತ್ ಶರ್ಮಾ ಅಭಿಮಾನಿಗಳಿಗಾಗಿ ಶುಭ ಸುದ್ದಿಯೊಂದು ಹೊರಬಿದ್ದಿದ್ದು, ಖಂಡಿತವಾಗಿಯೂ ಇದು ನೆರವೇರಬೇಕು ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ: ಹಿಜಾಬ್ ನಿಷೇಧ ವಾಪಸ್; ರಾಜ್ಯದಲ್ಲಿರುವುದು ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ: ಎಂ.ಪಿ. ರೇಣುಕಾಚಾರ್ಯ
ಏಕದಿನ ವಿಶ್ವಕಪ್ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಗಾಯಕ್ಕೆ ತುತ್ತಾಗಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಪುನಶ್ಚೇತನಕ್ಕಾಗಿ ಈಗಾಗಲೇ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ಸೇರಿಕೊಂಡಿದ್ದು, ಅವರು ಸಂಪೂರ್ಣವಾಗಿ ಫಿಟ್ ಆಗಲು ಇನ್ನು ಕೆಲ ಸಮಯ ಬೇಕಾಗಬಹುದು ಎಂದು ಹೇಳಲಾಗಿದೆ.
ಜನವರಿ 11ರಿಂದ ಅಫ್ಘಾನಿಸ್ತಾನ ವಿರುದ್ಧ ಆರಂಭವಾಗಲಿರುವ ಟಿ-20 ಸರಣಿಗೂ ಪಾಂಡ್ಯ ಅಲಭ್ಯರಾಗಿದ್ದು, ಐಪಿಎಲ್ ವೇಳೆಗೆ ಸಂಪೂರ್ಣ ಫಿಟ್ ಆಗುವುದು ಡೌಟ್ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿ ಅವರು 17ನೇ ಆವೃತ್ತಿಯ ಐಪಿಎಲ್ನಿಂದ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ. ಒಂದು ವೇಳೆ ಹಾಗೆ ಆದಲ್ಲಿ ಟೀಂ ಇಂಡಿಯಾ ಮತ್ತು ಮುಂಬೈ ಇಂಡಿಯನ್ಸ್ ತಂಡಕ್ಕೆ ಇದು ದೊಡ್ಡ ಹೊಡೆತ ಎಂದೇ ಹೇಳಬಹುದಾಗಿದೆ. ಇತ್ತ ಈ ಸುದ್ದಿ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮೀಮ್ಸ್ಗಳ ಮೂಲಕ ಪ್ರತಿಕ್ರಿಯಿಸಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.