ಮುಂಬೈ: ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿದ ಬಿಸಿಸಿಐ ಇದೀಗ 2024ರಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ಗೆ ತಯಾರಿ ಆರಂಭಿಸಿದೆ. ಇತ್ತ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರನ್ನು ಕ್ಯಾಪ್ಟನ್ ಆಗಿ ನೇಮಿಸಿದ್ದು, ವ್ಯಾಪಕ ಆಕ್ರೋಶ ಹಾಗೂ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ.
ಇತ್ತ ರೋಹಿತ್ ಶರ್ಮಾರನ್ನು ಫ್ರಾಂಚೈಸಿ ನಾಯಕತ್ವದಿಂದ ಕೆಳಗಿಳಿಸಿದ ಬೆನ್ನಲ್ಲೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರು ಮೆಂಟರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರೋಹಿತ್ರನ್ನು ನಾಯಕತ್ವದಿಂದ ಕೆಳಗಿಳಿಸಿದ ತಂಡದ ಮ್ಯಾನೇಜ್ಮೆಂಟ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ: ಆಟವಾಡುತ್ತಿದ್ದ ಮಗುವಿನ ಮೇಲೆ ಹರಿಯಿತು ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ
ಇತ್ತ ನಾಯಕತ್ವದಿಂದ ಕೆಳಗಿಳಿಸಿದ ಕುರಿತು ತಮ್ಮ ಆಪ್ತರ ಬಳಿ ಅಸಮಾಧಾನ ಹೊರಹಾಕಿರುವ ರೋಹಿತ್ ಶರ್ಮಾ, ನನಗೆ ಒಂದು ಫೋನ್ ಕಾಲ್ ಕೂಡ ಮಾಡದೆ ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ನಾನು ಈ ವಿಚಾರವನ್ನು ತಿಳಿದುಕೊಂಡೆ. ತಂಡಕ್ಕೆ ಐದು ಐಪಿಎಲ್ ಟ್ರೋಫಿಗಳನ್ನು ಗೆದ್ದು ಕೊಟ್ಟಿರುವ ನನಗೆ ಅಗೌರವವಾಗಿದೆ ಎಂದು ರೋಹಿತ್ ಶರ್ಮಾ ತಮ್ಮ ಆಪ್ತರ ಬಳಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ.
ಈಗಾಗಲೇ ಹಾರ್ದಿಕ್ ಪಾಂಡ್ಯರನ್ನು ಮುಂಬರುವ ಆವೃತ್ತಿಗೆ ತಂಡದ ನಾಯಕನನ್ನಾಗಿ ಮಾಡುವ ಮೂಲಕ ಮುಂಬೈ ಇಂಡಿಯನ್ಸ್ ಸಾಕಷ್ಟು ಖಂಡನೆಗೆ ಗುರಿಯಾಗಿದ್ದು, ಇದರ ಪರಿಣಾಮ ಸಾಮಾಜಿಕ ಜಾಲತಾಣದ ಮೇಲೆ ಬೀರಿದೆ. ತಂಡದ ನಾಯಕತ್ವ ವಹಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ರೋಹಿತ್ ಶರ್ಮಾರಂತೆ ಯಶಸ್ವಿ ನಾಯಕನಾಗಲಿದ್ದಾರಾ ಎಂದು ಕಾದುನೋಡಬೇಕಿದೆ.