ಬೆಂಗಳೂರು: ನಿರೀಕ್ಷೆಯಂತೆಯೇ ಅನುಭವಿ ಬ್ಯಾಟರ್ ರೋಹಿತ್ ಶರ್ಮ ಅವರನ್ನು ಭಾರತ ಟಿ20 ತಂಡದ ಹೊಸ ನಾಯಕರನ್ನಾಗಿ ನೇಮಿಸಲಾಗಿದೆ. ಟಿ20 ವಿಶ್ವಕಪ್ ಮುಕ್ತಾಯಗೊಂಡ ಬೆನ್ನಲ್ಲೇ ತವರಿನಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ 3 ಪಂದ್ಯಗಳ ಟಿ20 ಸರಣಿಯಲ್ಲಿ ಅವರು 16 ಸದಸ್ಯರ ಭಾರತ ತಂಡ ಮುನ್ನಡೆಸಲಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್ ತಂಡಕ್ಕೆ ರೋಹಿತ್, ವಿರಾಟ್ ಕೊಹ್ಲಿ ಉತ್ತರಾಧಿಕಾರಿಯಾಗಿದ್ದರೆ, ಕನ್ನಡಿಗ ಕೆಎಲ್ ರಾಹುಲ್ ಉಪನಾಯಕರಾಗಿ ಬಡ್ತಿ ಪಡೆದಿದ್ದಾರೆ. ಟಿ20 ತಂಡದ ನಾಯಕತ್ವ ತ್ಯಜಿಸಿರುವ ಕೊಹ್ಲಿಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಐಪಿಎಲ್ನಲ್ಲಿ ಮಿಂಚಿದ್ದ ಋತುರಾಜ್ ಗಾಯಕ್ವಾಡ್, ಹರ್ಷಲ್ ಪಟೇಲ್, ಆವೇಶ್ ಖಾನ್ ಹಾಗೂ ವೆಂಕಟೇಶ್ ಅಯ್ಯರ್ ಮೊದಲ ಬಾರಿಗೆ ರಾಷ್ಟ್ರೀಯ ತಂಡದ ಕರೆ ಪಡೆದಿದ್ದಾರೆ.
ಟಿ20 ವಿಶ್ವಕಪ್ನಲ್ಲಿ ಆಡಿದ ಪ್ರಮುಖ ಆಟಗಾರರಾದ ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. 3 ಟಿ20 ಪಂದ್ಯಗಳು ನ. 17, 19, 21ರಂದು ಕ್ರಮವಾಗಿ ಜೈಪುರ, ರಾಂಚಿ, ಕೋಲ್ಕತದಲ್ಲಿ ನಡೆಯಲಿದ್ದು, ನಂತರ ನ. 25ರಿಂದ ನಡೆಯಲಿರುವ 2 ಪಂದ್ಯಗಳ ಟೆಸ್ಟ್ ಸರಣಿಗೆ ತಂಡ ಪ್ರಕಟ ವಿಳಂಬಗೊಂಡಿದೆ. ನೂತನ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಹೊಸ ಅಧ್ಯಾಯ ಬರೆಯಲು ಟೀಮ್ ಇಂಡಿಯಾ ಸಜ್ಜಾಗಿದೆ.
ಟಿ20 ತಂಡ: ರೋಹಿತ್ ಶರ್ಮ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೀ), ಇಶಾನ್ ಕಿಶನ್ (ವಿಕೀ), ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ಆರ್.ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮದ್ ಸಿರಾಜ್.
NEWS – India’s squad for T20Is against New Zealand & India ‘A’ squad for South Africa tour announced.@ImRo45 named the T20I Captain for India.
More details here – https://t.co/lt1airxgZS #TeamIndia pic.twitter.com/nqJFWhkuSB
— BCCI (@BCCI) November 9, 2021