ನವದೆಹಲಿ: ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೆ ಸ್ಪಿನ್ನರ್ ಕುಲದೀಪ್ ಯಾದವ್ರನ್ನು ಭಾರತ ತಂಡಕ್ಕೆ ಸೇರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ ಹೇಳಿದೆ.
ಆತಿಥೇಯ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 0-2 ಅಂತರದಿಂದ ಕಳೆದುಕೊಂಡಿದೆ. ‘ಭಾರತದ ನಾಯಕ ರೋಹಿತ್ ಶರ್ಮಾ ಪಂದ್ಯದ ಎರಡನೆ ದಿನ ಫೀಲ್ಡಿಂಗ್ ಮಾಡುವಾಗ ಹೆಬ್ಬೆರಳಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಬಿಸಿಸಿಐನ ವೈದ್ಯಕೀಯ ತಂಡ ಅವರನ್ನು ಪರೀಕ್ಷಿಸಿದ್ದು ಢಾಕಾದ ಸ್ಥಳೀಯ ಆಸ್ಪತ್ರೆಯಲ್ಲಿ ಸ್ಕ್ಯಾನ್ಗೆ ಒಳಗಾಗಿದ್ದಾರೆ. ಅವರು ತಜ್ಞರೊಡನೆ ಸಮಾಲೋಚನೆ ನಡೆಸಲು ಮುಂಬೈಗೆ ಮರಳಿದ್ದು ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ. ಮುಂಬರುವ ಟೆಸ್ಟ್ ಸರಣಿಯಲ್ಲಿ ಅವರು ಭಾಗವಹಿಸುತ್ತಾರಾ ಇಲ್ಲವಾ ಎನ್ನುವುದನ್ನು ಮುಂದಿನ ದಿನಗಳಲ್ಲಿ ನೋಡಬೇಕು’ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ತಂಡದ ಕೋಚ್ ರಾಹುಲ್ ದ್ರಾವಿಡ್, ರೋಹಿತ್ ಬಾಂಗ್ಲಾ ವಿರುದ್ಧದ ಮೂರನೇ ಏಕದಿನ ಪಂದ್ಯದಿಂದ ಹೊರಗುಳಿಯುವುದನ್ನು ಖಚಿತಪಡಿಸಿದ್ದಾರೆ. ಮೊದಲ ದಿನದ ಪಂದ್ಯದ ನಂತರ ವೇಗಿ ಕುಲದೀಪ್ ಸೇನ್ ಬೆನ್ನಿನಲ್ಲಿ ಬಿಗಿತ ಉಂಟಾಗಿತ್ತು. ಬಿಸಿಸಿಐ ವೈದ್ಯಕೀಯ ತಂಡ ಅವರನ್ನು ಪರೀಕ್ಷಿಸಿದ್ದು, 2ನೇ ಏಕದಿನ ಪಂದ್ಯದಿಂದ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ.
ಇನ್ನೊಬ್ಬ ವೇಗಿ ದೀಪಕ್ ಚಹಾರ್, 2 ನೇ ದಿನ ಎಡ ಮಂಡಿಯಲ್ಲಿ ಉಂಟಾದ ನೋವಿನಿಂದ ಸರಣಿಯಿಂದ ಹೊರಗುಳಿದಿದ್ದಾರೆ. ಕುಲದೀಪ್ ಮತ್ತು ದೀಪಕ್ ಇಬ್ಬರೂ ಈಗ ತಮ್ಮ ಗಾಯಗಳ ಹೆಚ್ಚಿನ ನಿರ್ವಹಣೆಗಾಗಿ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಹೀಗಾಗಿ ಬಿಸಿಸಿಐ, ಕುಲ್ದೀಪ್ ಯಾದವ್ರನ್ನು ತಂಡಕ್ಕೆ ಸೇರಿಸಿದೆ
ಬಾಂಗ್ಲಾದೇಶ ವಿರುದ್ಧದ 3ನೇ ಏಕದಿನ ಪಂದ್ಯಕ್ಕೆ ಭಾರತ ತಂಡ ಹೀಗಿರಲಿದೆ:
ಕೆಎಲ್ ರಾಹುಲ್ (ಸಿ) (ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಮತ್ತು ಕುಲದೀಪ್ ಯಾದವ್. (ಏಜೆನ್ಸೀಸ್)