ಹಾವೇರಿ: ಕರೊನಾ ಎರಡನೇ ಅಲೆಯಿಂದಾಗಿ ಸೋಂಕು ತಡೆಗಟ್ಟುವ ಸಲುವಾಗಿ ಜಿಲ್ಲಾಡಳಿತ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದೆ.
ಜಿಲ್ಲಾಧಿಕಾರಿ ಆದೇಶದ ಪ್ರಕಾರ ನಾಲ್ಕಕ್ಕಿಂತ ಹೆಚ್ಚು ಜನರು ಎಲ್ಲಿಯೂ ಸೇರುವಂತಿಲ್ಲ. ಪ್ರತಿಭಟನೆ, ಸಭೆ-ಸಮಾರಂಭಗಳನ್ನು ನಡೆಸುವಂತಿಲ್ಲ. ಆದರೆ, ಜಿಲ್ಲೆಯ ಕೆಲವೆಡೆ ಬೇಕಾಬಿಟ್ಟಿಯಾಗಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಿಷೇಧಾಜ್ಞೆ ಉಲ್ಲಂಘಿಸಲಾಗುತ್ತಿದೆ.
ಜಿಲ್ಲೆಯ ವಿವಿಧೆಡೆ ಸಂಘಟನೆ, ಸಂಘ-ಸಂಸ್ಥೆಗಳ ಹೆಸರಿನಲ್ಲಿ ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಪ್ರತಿಭಟನೆ, ಕರೊನಾ ವಾರಿಯರ್ಸ್ಗೆ ಸನ್ಮಾನ, ಆಹಾರ ಧಾನ್ಯ ಕಿಟ್ ವಿತರಣೆ, ಮನವಿ ಸಲ್ಲಿಕೆ ಸೇರಿ ಇತರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಈ ಮೂಲಕ ಕರೊನಾ ಪ್ರಸರಣ ಹೆಚ್ಚಾಗಲು ಕಾರಣರಾಗುತ್ತಿದ್ದಾರೆ.
ಕಿಟ್ ವಿತರಣೆ ಹೆಸರಿನಲ್ಲಿ ನೂರಾರು ಜನರನ್ನು ಒಂದೆಡೆ ಸೇರುತ್ತಿದ್ದಾರೆ. ಇಂಥ ಸಮಯದಲ್ಲಿ ಯಾರೂ ಪರಸ್ಪರ ಅಂತರ ಕಾಯ್ದುಕೊಳ್ಳುತ್ತಿಲ್ಲ. ಕಿಟ್ಗಾಗಿ ಜನರು ಮುಗಿಬೀಳುತ್ತಿರುವ ದೃಶ್ಯಗಳು ಜಿಲ್ಲೆಯಲ್ಲಿ ಸಾಮಾನ್ಯವಾಗಿವೆ. ವಿತರಣೆ ಮಾಡುವವರು ಸಹ ಯಾವುದೇ ನಿಯಮ ಪಾಲಿಸುತ್ತಿಲ್ಲ.
ಇನ್ನು ಕೆಲವೆಡೆ ವಿವಿಧ ಬೇಡಿಕೆ ಈಡೇರಿಸುವಂತೆ ತಹಸೀಲ್ದಾರ್, ಶಾಸಕರ ಜನ ಸಂಪರ್ಕ ಕಚೇರಿ ಸೇರಿ ವಿವಿಧೆಡೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸುತ್ತಿದ್ದಾರೆ. ಈ ವೇಳೆ ಯಾರೊಬ್ಬರೂ ಸಮರ್ಪಕವಾಗಿ ಮಾಸ್ಕ್ ಧರಿಸುತ್ತಿಲ್ಲ. ಪರಸ್ಪರ ಅಂತರವನ್ನೂ ಕಾಯ್ದುಕೊಳ್ಳುತ್ತಿಲ್ಲ.
ಇತ್ತ ಜಿಲ್ಲಾಡಳಿತ ಸೋಂಕು ತಡೆಗೆ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಕರೊನಾ ಟೆಸ್ಟ್ ಮಾಡಿಸದ ಗ್ರಾಮವನ್ನೇ ಸೀಲ್ಡೌನ್ ಮಾಡಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಪೊಲೀಸರು ಪ್ರಮುಖ ವೃತ್ತಗಳಲ್ಲಿ ಮಾಸ್ಕ್ ಧರಿಸದೆ ಸಂಚರಿಸುವ ವಾಹನ ಸವಾರರ ವಿರುದ್ಧ ದಂಡ ವಿಧಿಸುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕಿಟ್ ವಿತರಣೆ, ಪ್ರತಿಭಟನೆ, ಮನವಿ ಸಲ್ಲಿಸುವ ವೇಳೆ ನಿಯಮ ಉಲ್ಲಂಘನೆ ಆಗುತ್ತಿರುವುದು ಜಿಲ್ಲಾಡಳಿತಕ್ಕೆ ಗೊತ್ತಿಲ್ಲವೇ ? ಅಥವಾ ಗೊತ್ತಿದ್ದೂ ಸುಮ್ಮನಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.
ಜಿಲ್ಲಾಡಳಿತ ಕೂಡಲೆ ನಿಯಮ ಉಲ್ಲಂಘಿಸುವವರ ವಿರುದ್ಧ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.