ಬೆಂಗಳೂರು: ಸರ್ಕಾರಿ ಆರೋಗ್ಯ ಸೇವೆಯಲ್ಲಿ ವೈದ್ಯರ ಕೊರತೆ ನೀಗಿಸಿಕೊಳ್ಳಲು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ವೈದ್ಯರ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯದಲ್ಲಿ ವೈದ್ಯ ಪದವಿ ಪೂರೈಸಿದ ವಿದ್ಯಾರ್ಥಿಗಳ ಕಡ್ಡಾಯ ಸೇವೆ ಬಳಸಿಕೊಳ್ಳುವ ಕಾಯ್ದೆಗೆ ಸರ್ಕಾರ ತಿದ್ದುಪಡಿ ತರುತ್ತಿದೆ.
ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ ಈ ತೀರ್ಮಾನ ಜಾರಿಗೆ ತರಲು ಸುಗ್ರೀವಾಜ್ಞೆಯನ್ನೂ ತರಲಾಗುತ್ತಿದೆ. ಬಳಿಕ ಮುಂಬರುವ ಅಧಿವೇಶನದಲ್ಲಿ ಕಾಯ್ದೆ ರೂಪ ಕೊಡಲಾಗುತ್ತದೆ.
ಸುದ್ದಿಗೋಷ್ಠಿಯಲ್ಲಿ ಸಂಪುಟ ಸಭೆಯ ನಿರ್ಣಯದ ಸಾರಾಂಶ ವಿವರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್, ಕರ್ನಾಟಕದಲ್ಲಿ ಎಂಬಿಬಿಎಸ್ ಅಥವಾ ವೈದ್ಯಕೀಯ ಪಿಜಿ ಕೋರ್ಸ್ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಒಂದು ವರ್ಷ ಕಡ್ಡಾಯ ಸರ್ಕಾರಿ ಸೇವೆಗೆ ನೋಂದಾಯಿಸುತ್ತಿರುವ ಅಭ್ಯರ್ಥಿಗಳ ಸೇವೆಯನ್ನು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಿತಿಗೊಳಿಸಿ, ಕೌನ್ಸಲಿಂಗ್ ಮೂಲಕ ಮೆರಿಟ್ ಆಧಾರದಲ್ಲಿ ನಿಯೋಜಿಸಲು ಕಡ್ಡಾಯ ಸೇವಾ ತರಬೇತಿ ಅಧಿನಿಯಮ 2012ರ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ ಎಂದರು.