ಗೋಣಿಕೊಪ್ಪ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿಯ ನೆಹರು ಯುವ ಕೇಂದ್ರ, ಜಿಲ್ಲಾ ಯುವ ಒಕ್ಕೂಟ ಮತ್ತು ವಿರಾಜಪೇಟೆ ತಾಲೂಕು ಯುವ ಒಕ್ಕೂಟದ ಆಶ್ರಯದಲ್ಲಿ ಎಲಿಯಂಗಾಡು ಫ್ರೆಂಡ್ಸ್ ಯುವಕ ಸಂಘದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿತ್ತು.
ಕೊಂಡಂಗೇರಿ ಸಮೀಪದ ಎಲಿಯಂಗಾಡು ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕ್ರೀಡಾಕೂಟವನ್ನು ಸಂಘದ ಅಧ್ಯಕ್ಷ ಕೆ.ಎಚ್.ಅಬ್ದುಲ್ ರಹಿಮಾನ್ (ಅಂದಾಯಿ)ಉದ್ಘಾಟಿಸಿದರು.
ಹಾಲುಗುಂದ ಗ್ರಾಪಂ ಅಧ್ಯಕ್ಷ ಪಂದಿಕಂಡ ದಿನೇಶ್ (ಕುಶ) ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಮರೆಯಾಗುತ್ತಿರುವ ಗ್ರಾಮೀಣ ಕ್ರೀಡಾಕೂಟಗಳಿಗೆ ಪುನಶ್ಚೇತನ ನೀಡುವ ಅಗತ್ಯವಿದೆ. ಪ್ರತಿ ಗ್ರಾಮಗಳಲ್ಲೂ ಗ್ರಾಮೀಣ ಕ್ರೀಡಾಕೂಟಕ್ಕೆ ಉತ್ತೇಜನ ನೀಡಬೇಕಿದೆ. ಇದರಿಂದ ಗ್ರಾಮೀಣ ಕ್ರೀಡೆಗಳ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಹಾಲುಗುಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆಮೀನ, ಎಲಿಯಂಗಾಡು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಡಿ.ಎ. ಕಮರುನ್ನಿಸ, ಯಮುನಾ ಇದ್ದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.