ಮುಂಬೈ: ತೀರಾ ಇತ್ತೀಚಿನವರೆಗೂ ಶೇರುಪೇಟೆಯ ಸಾಮ್ರಾಜ್ಞಿಯಾಗಿ ಮೆರೆದಿದ್ದ ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ನ (ಎನ್ಎಸ್ಇ) ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಆಗಿದ್ದ ಚಿತ್ರಾ ರಾಮಕೃಷ್ಣ ಅವರನ್ನು ಬಂಧಿಸಲಾಗಿದೆ.
2013ರಿಂದ ಈ ಹುದ್ದೆಯನ್ನು ಅಲಂಕರಿಸಿದ್ದ ಚಿತ್ರಾ ವೃತ್ತಿಯಲ್ಲಿ ಲೆಕ್ಕಪರಿಶೋಧಕಿ ಆಗಿದ್ದ ಅವರು, ಎನ್ಎಸ್ಇ ಗಣಕೀಕರಣ ಮತ್ತು ಸರ್ಕಾರ ಇಪಿಎಫ್ಒದ ಫಂಡ್ ಅನ್ನು ಷೇರುಗಳಲ್ಲಿ ಹೂಡಿಕೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ, 2016ರಲ್ಲಿ ವೈಯಕ್ತಿಕ ಕಾರಣ ಕೊಟ್ಟು ದಿಢೀರಾಗಿ ಎನ್ಎಸ್ಇ ಎಂಡಿ ಮತ್ತು ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಅವರು ವಿವಾದದ ಕೇಂದ್ರಬಿಂದುವಾಗಿದ್ದಾರೆ.
2014 ರಿಂದ 2016 ರ ಅವಧಿಯಲ್ಲಿ ಇಮೇಲ್ ಐಡಿ ಮೂಲಕ ನಡೆಸಿದ ವ್ಯವಹಾರದಲ್ಲಿ ಅಪರಿಚಿತ ವ್ಯಕ್ತಿಯೊಂದಿಗೆ ಎನ್ಎಸ್ಇಯ ಆಂತರಿಕ ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಭಾರಿ ವಂಚನೆ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. ಎನ್ಎಸ್ಇನ ಕಾರ್ಪೆರೇಟ್ ಆಡಳಿತದಲ್ಲಿ ಲೋಪ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಶ್ನಾವಳಿಗಳನ್ನು ಸಿದ್ಧಪಡಿಸಿ ಅದರ ಚೌಕಟ್ಟಿನಲ್ಲಿ ಚಿತ್ರಾ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು.
ಚಿತ್ರಾ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತು. ಈ ಹಿನ್ನೆಲೆಯಲ್ಲಿ ಸಿಬಿಐ ಭಾನುವಾರ (ಮಾರ್ಚ್ 6) ತಡರಾತ್ರಿ ದೆಹಲಿಯಲ್ಲಿ ಬಂಧಿಸಿದೆ. ಇವರ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ನಂತರ ಅವರನ್ನು ಸಿಬಿಐ ಪ್ರಧಾನ ಕಚೇರಿಯ ಲಾಕಪ್ನಲ್ಲಿ ಇರಿಸಲಾಗಿತ್ತು. ತನಿಖಾ ಸಂಸ್ಥೆಯು ಸತತ ಮೂರು ದಿನಗಳ ಕಾಲ ಅವರನ್ನು ವಿಚಾರಣೆ ಮಾಡಿದೆ. ಅವರ ನಿವಾಸದಲ್ಲಿ ಶೋಧ ನಡೆಸಲಾಗಿದ್ದು, ಸಿಬಿಐ ಪ್ರಶ್ನೆಗಳಿಗೆ ಚಿತ್ರಾ ರಾಮಕೃಷ್ಣ ಅವರು ಸರಿಯಾಗಿ ಪ್ರತಿಕ್ರಿಯಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏನಿದು ಘಟನೆ?
ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ನ ಸರ್ವರ್ ವ್ಯವಸ್ಥೆಯನ್ನು ಖಾಸಗಿ ಕಂಪನಿ ದೆಹಲಿ ಮೂಲದ ಒಪಿಜಿ ಸೆಕ್ಯುರೀಟಿಸ್ ಪ್ರೈವೇಟ್ ಲಿಮಿಟೆಡ್ನ ಮಾಲೀಕ ಸಂಜಯ್ ಗುಪ್ತಾ ಮತ್ತು ಪ್ರಮೋಟರ್ಗಳು ಎನ್ಎಸ್ಇನ ಅನಾಮಧೇಯ ಅಧಿಕಾರಿಗಳ ಜತೆಗೂಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದೇ ರೀತಿ, ಮುಂಬೈನ ಎನ್ಎಸ್ಇನ ಅನಾಮಧೇಯ ಅಧಿಕಾರಿಗಳು 2010-12ರ ಅವಧಿಯಲ್ಲಿ ಸ್ಟಾಕ್ ಎಕ್ಸ್ಚೇಂಜ್ನ ಸರ್ವರ್ಗೆ ಲಾಗಿನ್ ಆಗುವುದಕ್ಕೆ ಹೊರಗಿನ ಕಂಪನಿಗೆ ಅನುಕೂಲ ಮಾಡಿಕೊಟ್ಟಿದ್ದರು. ಈ ರೀತಿ ಮಾಡಿದ ಷೇರುಪೇಟೆಯ ಇತರ ಕಂಪನಿಗಳಿಗಿಂತ ಮೊದಲೇ ಮಾಹಿತಿ ಪಡೆಯಲು ಅವಕಾಶ ನೀಡಿದ್ದರು. ಎನ್ಎಸ್ಇನ ಟ್ರೇಡಿಂಗ್ ದತ್ತಾಂಶಗಳ ಪ್ರಕಾರ, ಮೊದಲು ಲಾಗಿನ್ ಆಗಿರುವ ಪ್ರಕರಣಗಳಲ್ಲಿ ಶೇಕಡ 90 ಲಾಗಿನ್ ಸಂಜಯ್ ಗುಪ್ತಾ ಹೆಸರಲ್ಲಿರುವುದಾಗಿ ಆರೋಪಿಸಲಾಗಿದೆ.
ಎಫ್ಐಆರ್ನಲ್ಲಿ ಇವರುಗಳ ವಿರುದ್ಧ ಕ್ರಿಮಿನಲ್ ಪಿತೂರಿ, ದಾಖಲೆಗಳ ನಾಶ ಅಥವಾ ಎಲೆಕ್ಟ್ರಾನಿಕ್ ದಾಖಲೆಯನ್ನು ಸಾಕ್ಷ್ಯವಾಗಿ ಪರಿಗಣಿಸುವುದನ್ನು ತಡೆಯುವ ಯತ್ನದ ಆರೋಪವನ್ನು ಹೊರಿಸಲಾಗಿತ್ತು. ಇತರ ಆರೋಪಗಳಲ್ಲಿ, ಭ್ರಷ್ಟಾಚಾರ ತಡೆ ಕಾಯಿದೆಯಡಿಯಲ್ಲಿ ಲಂಚ ನೀಡುವ ಮತ್ತು ಸ್ವೀಕರಿಸುವ ಆರೋಪ, ಅಧಿಕಾರದ ದುರುಪಯೋಗ, ಸಾಕ್ಷ್ಯ ನಾಶದ ಆರೋಪಗಳೂ ಇದ್ದವು. ಇವೆಲ್ಲ ಅಲ್ಲದೆ ಎಫ್ಐಆರ್ನಲ್ಲಿ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯನ್ನು ಸಹ ಉಲ್ಲೇಖಿಸಲಾಗಿತ್ತು.
ಸೆಬಿ ಆಂತರಿಕ ತನಿಖೆ: ಎನ್ಎಸ್ಇ 2017ರಲ್ಲಿ ಐಪಿಒ ಬಿಡುಗಡೆ ಮಾಡಿ ಮಾರುಕಟ್ಟೆ ಪ್ರವೇಶಿಸಬೇಕಾಗಿತ್ತು. ಆದರೆ, ಸರ್ವರ್ ಅನ್ನು ಕೋ-ಲೊಕೇಶನ್ ಮೂಲಕ ಶೇರ್ ಮಾಡಿಕೊಂಡಿದ್ದ ಕಾರಣ ಎನ್ಎಸ್ಇ ಪ್ರಯತ್ನಕ್ಕೆ ಸೆಬಿ ತಡೆ ನೀಡಿತ್ತು. ಮೂರು ವರ್ಷಗಳ ತನಿಖೆ ಬಳಿಕ ಎನ್ಎಸ್ಇಗೆ 90 ದಶಲಕ್ಷ ಡಾಲರ್ಗೂ ಅಧಿಕ ದಂಡ ವಿಧಿಸಿತು. ಅಲ್ಲದೆ ಆರು ತಿಂಗಳ ಅವಧಿಗೆ ಸೆಕ್ಯುರಿಟೀಸ್ ಮಾರುಕಟ್ಟೆಯಿಂದ ಹಣ ಸಂಗ್ರಹಿಸದಂತೆ ನಿಷೇಧ ಹೇರಿತ್ತು. ಇದನ್ನು ಎನ್ಎಸ್ಇ ಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಬಳಿಕ ಐಪಿಒ ಬಿಡುಗಡೆಗೆ ಸೆಬಿಯಿಂದ ಅನುಮತಿ ಪಡೆದಿತ್ತು. ಇದಕ್ಕಾಗಿ ಸಲ್ಲಿಸಿದ ದಾಖಲೆಗಳು ಈಗ ಸೆಬಿಯ ಪರಿಶೀಲನೆಯಲ್ಲಿವೆ.
ಚಿತ್ರಾ ರಾಮಕೃಷ್ಣ, ಎನ್ಎಸ್ಇನ ಇನ್ನೊಬ್ಬ ಮಾಜಿ ಸಿಇಒ ರವಿನಾರಾಯಣ್, ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ ಸುಬ್ರಮಣಿಯನ್ ಅವರ ವಿರುದ್ಧ ಸಿಬಿಐ ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದು, ದೇಶ ಬಿಟ್ಟು ಹೋಗದಂತೆ ತಡೆ ನೀಡಿತ್ತು. ನಂತರ ಚಿತ್ರಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅದನ್ನು ಕೋರ್ಟ್ ವಜಾ ಮಾಡಿದೆ. ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎನ್ಎಸ್ಇಯ ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ಅವರನ್ನು ಕೆಲ ದಿನಗಳ ಹಿಂದೆ ಚೆನ್ನೈನಲ್ಲಿ ಬಂಧಿಸಲಾಗಿದೆ.
ನಿಗೂಢ ಯೋಗಿಯ ಜತೆ ಸಂಪರ್ಕ!
ಕುತೂಹಲದ ವಿಷಯ ಏನೆಂದರೆ, ಚಿತ್ರಾ ಅವರಿಗೆ ಹಿಮಾಲಯದ ನಿಗೂಢ ಯೋಗಿಯ ಜತೆ ಸಂಪರ್ಕ ಇದ್ದುದು ಸೆಕ್ಯುರಿಟೀಸ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ತನಿಖೆಯಿಂದ ತಿಳಿದುಬಂದಿದೆ.
ಹಿಮಾಲಯದಲ್ಲಿ ವಾಸಿಸುವ ಯೋಗಿ ಎಂದು ಹೇಳಲಾಗುವ ವ್ಯಕ್ತಿಯೊಂದಿಗೆ ಇಮೇಲ್ ಮೂಲಕ ರಾಷ್ಟ್ರೀಯ ಸ್ಟಾಕ್ ಎಕ್ಸ್ಚೇಂಜ್ನ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎನ್ನುವ ಆರೋಪ ಇವರ ಮೇಲಿದೆ. ಈ ತಿಂಗಳ ಆರಂಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಆನಂದ್ ಸುಬ್ರಮಣ್ಯಂ ಅವರೇ ಈ ಯೋಗಿ ಎಂಬ ಶಂಕೆ ವ್ಯಕ್ತವಾಗಿದ್ದು ಈ ಬಗ್ಗೆ ಇನ್ನಷ್ಟೇ ಸತ್ಯ ಹೊರಬರಬೇಕಿದೆ.
2013ರ ಏಪ್ರಿಲ್ನಲ್ಲಿ ಮುಖ್ಯ ಕಾರ್ಯತಂತ್ರದ ಸಲಹೆಗಾರರಾಗಿ ಸೇರಿದ ಆನಂದ್ ಸುಬ್ರಮಣ್ಯಂ ಅವರು, 2015-16ರಲ್ಲಿ ಎನ್ಎಸ್ಇಯ ಗ್ರೂಪ್ ಆಪರೇಟಿಂಗ್ ಆಫೀಸರ್ ಮತ್ತು ಚಿತ್ರಾ ರಾಮಕೃಷ್ಣ ಅವರ ಸಲಹೆಗಾರರಾಗಿದ್ದರು. ಆನಂದ್ ಅವರನ್ನು ಗ್ರೂಪ್ ಆಪರೇಟಿಂಗ್ ಆಫೀಸರ್ ಮತ್ತು ಎಂಡಿ ಸಲಹೆಗಾರರಾಗಿ ನೇಮಿಸಲು ಚಿತ್ರಾ ಅವರು ಹಿಮಾಲಯ ಶ್ರೇಣಿಗಳಲ್ಲಿ ವಾಸಿಸುವ ನಿಗೂಢ ಯೋಗಿಯಿಂದ ಮಾರ್ಗದರ್ಶನ ಪಡೆದರು ಎಂದು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾದ (ಸೆಬಿ) ಹೇಳಿದ ನಂತರ ಚಿತ್ರಾ ರಾಮಕೃಷ್ಣ ರಾಷ್ಟ್ರದ ಮಾಧ್ಯಮಗಳಲ್ಲಿ ಪ್ರಮುಖ ಸುದ್ದಿಯಾಗಿದ್ದರು.
ಷೇರುಪೇಟೆಯ ಯಾವುದೇ ಹೆಚ್ಚಿನ ಅನುಭವ ಇಲ್ಲದೇ ಇದ್ದರೂ ಆನಂದ್ ಅವರನ್ನು ಚಿತ್ರಾ ಅವರು ಹಿರಿಯ ಹುದ್ದೆಗೆ ನೇಮಕ ಮಾಡಿಕೊಂಡಿದ್ದರು. ಜೊತೆಗೆ ಅವರಿಗೆ ಹಲವು ಬಾರಿ ಪದೋನ್ನತಿ ನೀಡಲಾಗಿತ್ತು. ವಿನಾಕಾರಣ ವೇತನ ಹೆಚ್ಚಳ ಮಾಡಲಾಗಿತ್ತು. ಈ ಅವಧಿಯಲ್ಲಿಯೇ ಅವ್ಯವಹಾರಗಳು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಹಿಮಾಲಯದ ಯೋಗಿಯ ಕುರಿತು ಇನ್ನಷ್ಟು ಸತ್ಯವನ್ನು ತನಿಖಾಧಿಕಾರಿಗಳು ಕಂಡುಹಿಡಿಯುತ್ತಿದ್ದಾರೆ.
‘ವಾರದಲ್ಲೇ ನೀನು ಫಿನಿಷ್, ನಿನ್ನ ತಾಯಿ ಪತಿವ್ರತೆ ಆಗಿದ್ರೆ ತಪ್ಪಿಸು ನೋಡುವ…’ ವಿದ್ಯಾರ್ಥಿಗೆ ವಿದೇಶಗಳಿಂದ ಬೆದರಿಕೆ!
ನಾಲ್ವರು ಸಹೋದ್ಯೋಗಿಗಳನ್ನು ಶೂಟ್ ಮಾಡಿ ಪ್ರಾಣ ತೆಗೆದದ್ದು ಹುಕ್ಕೇರಿ ಯೋಧ… ಕಾರಣ ಬಿಚ್ಚಿಟ್ಟ ಕುಟುಂಬಸ್ಥರು!