ಮಂಡ್ಯ: ನಗರ ವ್ಯಾಪ್ತಿಯ ಎಸ್.ಡಿ.ಜಯರಾಂ ಬಡಾವಣೆಯ ನಿವಾಸಿಗಳಿಗೆ ಮೂಲ ಸೌಕರ್ಯ ಒದಗಿಸುವುದರ ಜತೆಗೆ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿದರು.
ಅಧಿಕಾರಿಗಳೊಂದಿಗೆ ಬಡಾವಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಗ್ರಾಮ ಪಂಚಾಯತಿಗೆ ಇಲ್ಲಿನ ಸ್ವಚ್ಛತೆ ಕಾಪಾಡಲು ಸೂಚಿಸಲಾಗಿದೆ. ಮತ್ತೆ ರಾತ್ರಿ ಹೊತ್ತು ಹೊರಗಿನಿಂದ ಯುವಕರು ಬಂದು ಸಮಸ್ಯೆಯನ್ನು ಹುಟ್ಟುಹಾಕುತ್ತಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಂಡು ರಾತ್ರಿ ಸಮಯದಲ್ಲಿ ಗಸ್ತು ಹೆಚ್ಚಿಸುತ್ತಾರೆ. ಸ್ಥಳೀಯ ಪೊಲೀಸರೊಂದಿಗೆ ಸಹಕರಿಸಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತದೆ ಎಂದರು.
ಮೂಲ ಸೌಕರ್ಯಗಳಾದ ಚರಂಡಿ, ಕುಡಿಯುವ ನೀರು, ಬೀದಿ ದೀಪ, ರಸ್ತೆ, ಶೌಚಗೃಹ, ವಾಸಸ್ಥಳ ದೃಢೀಕರಣ ಪತ್ರ, ಸಾರಿಗೆ ವ್ಯವಸ್ಥೆ ಹಾಗೂ ಹಕ್ಕು ಪತ್ರಗಳಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಸಾರ್ವಜನಿಕರು ಸರಿಯಾದ ದಾಖಲೆಗಳನ್ನು ಕೊಟ್ಟು ಸಹಕರಿಸಿ. ಈ ಬಡಾವಣೆಯನ್ನು ನಗರಸಭೆಗೆ ಸೇರಿಸುವ ಸಂಬಂಧ ಎಸಿ ಅವರ ಅಧ್ಯಕ್ಷತೆಯಲ್ಲಿ ಸಭೆಯಾಗಿದೆ. ಆ ನಡಾವಳಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದು ಹೇಳಿದರು.
ಮತದಾರರ ಪಟ್ಟಿಯಿಂದ ಹೆಸರು ಬಿಟ್ಟುಹೋಗಿದೆ ಎಂದು ಕೆಲವರು ಮಾಹಿತಿ ನೀಡಿದ್ದಾರೆ. ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಸ್ಥಳದಲ್ಲೇ ಇದ್ದು, ಮನೆ ಮನೆಗೆ ಹೋಗಿ ಮತದಾರರ ಪಟ್ಟಿಯಲ್ಲಿನ ಹೆಸರಿನ ಬಗ್ಗೆ ಪರಿಶೀಲಿಸುತ್ತಾರೆ. 18 ವರ್ಷ ತುಂಬಿದ ಯುವಕ, ಯುವತಿಯರು ಹಾಗೂ ಕಾರಣಾಂತರಗಳಿಂದ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿದ್ದರೆ ಸೇರ್ಪಡೆ ಮಾಡುತ್ತಾರೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಪಂ ಸಿಇಒ ಶಾಂತಾ ಎಲ್.ಹುಲ್ಮನಿ, ಉಪವಿಭಾಗಾಧಿಕಾರಿ ಎಸ್.ಎಚ್. ಕೀರ್ತನಾ, ತಾಪಂ ಇಒ ವೇಣು ಇತರರಿದ್ದರು.