ಹೈದರಾಬಾದ್: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್ (ಕೆಟಿಆರ್) ಅವರೊಂದಿಗೆ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.
ತೆಲಂಗಾಣ, ಕರ್ನಾಟಕ ಸೇರಿದಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಇವರಿಬ್ಬರು ಸಮಾಲೋಚನೆ ನಡೆಸಿರುವುದಾಗಿ ತಿಳಿದುಬಂದಿದೆ. ಇದಕ್ಕೂ ಮುನ್ನ ತೆಲಂಗಾಣದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡಿದ್ದಾರೆ.
ಕಳೆದ ಮೇ ತಿಂಗಳಿನಲ್ಲಿ ಚಂದ್ರಶೇಖರ್ ರಾವ್ ಅವರು ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಜೆಡಿಎಸ್ ಮುಖಂಡರ ಜತೆ ಮಾತುಕತೆ ನಡೆಸಿದ್ದರು. ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು. ನಂತರ ಅವರು ವಿಜಯದಶಮಿ ಹೊತ್ತಿಗೆ ರಾಷ್ಟ್ರಮಟ್ಟದಲ್ಲಿ ಪರ್ಯಾಯ ರಾಜಕೀಯ ಶಕ್ತಿಯನ್ನು ಹುಟ್ಟುಹಾಕುವ ಸುಳಿವು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಯೋಜನೆ ರೂಪಿಸುತ್ತಿರುವ ಚಂದ್ರಶೇಖರ್ ರಾವ್, ರಾಷ್ಟ್ರೀಯ ಪಕ್ಷವನ್ನು ಪ್ರಾರಂಭಿಸುವ ಮೂಲಕ ಈ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಲವಾದ ಇಚ್ಛೆಯನ್ನೂ ಹೊಂದಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಎಚ್ಡಿಕೆ ಜತೆ ಸಚಿವರು ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಆದರೆ ಸದ್ಯ ಹುಟ್ಟಿಕೊಂಡಿರುವ ಅನುಮಾನಗಳು ಕೆ.ಚಂದ್ರಶೇಖರ್ ರಾವ್ ಹೊಸ ರಾಷ್ಟ್ರೀಯ ಪಕ್ಷವನ್ನು ಪ್ರಾರಂಭಿಸುತ್ತಾರೆಯೇ ಅಥವಾ ಟಿಆರ್ಎಸ್ ಅನ್ನು ರಾಷ್ಟ್ರೀಯ ಪಕ್ಷವಾಗಿ ಪರಿವರ್ತಿಸುತ್ತಾರೆಯೇ ಎಂಬ ಪ್ರಶ್ನೆಗಳು ಸಹ ತಲೆಎತ್ತಿವೆ. ಸದ್ಯ ಈಗ ಇರುವ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷವನ್ನೇ ಭಾರತೀಯ ರಾಷ್ಟ್ರ ಸಮಿತಿ ಎಂದು ಬದಲಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ರಾಷ್ಟ್ರ ರಾಜಕಾರಣದ ಮೇಲೆ ಕಣ್ಣಿಟ್ಟಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹ ಪ್ರಧಾನಮಂತ್ರಿ ಹುದ್ದೆಯ ಆಕಾಂಕ್ಷಿಯೇ ಎಂದು ಹೇಳಲಾಗುತ್ತಿದೆ.ಅದೇ ಇನ್ನೊಂದೆಡೆ, ಸದ್ಯಕ್ಕೆ ಕಾಂಗ್ರೆಸ್ ಪಕ್ಷವು ಕೆ.ಚಂದ್ರಶೇಖರ್ ರಾವ್ ಅವರ ಜತೆ ಕೈಜೋಡಿಸಲು ಉತ್ಸುಕವಾಗಿಲ್ಲ ಎನ್ನಲಾಗಿದೆ. ಆದ್ದರಿಂದ ಮುಂದೆ ಏನಾಗುತ್ತದೆ ಎಂದು ಕಾಲವೇ ಉತ್ತರಿಸಬೇಕಿದೆ. (ಏಜೆನ್ಸೀಸ್)
VIDEO: ಕರ್ತವ್ಯಲೋಪ- ಎಸ್ಐ, ಎಎಸ್ಐಯನ್ನೇ ಲಾಕಪ್ಗೆ ತಳ್ಳಿದ ಪೊಲೀಸ್ ಅಧಿಕಾರಿ; ವಿಡಿಯೋ ವೈರಲ್
ಗೇಮಿಂಗ್ ಆ್ಯಪ್ನಿಂದ ಬಳಕೆದಾರರಿಗೆ ಟೋಪಿ: ಆರು ಕಡೆ ಇ.ಡಿ ದಾಳಿ- 17 ಕೋಟಿ ರೂ. ಜಪ್ತಿ
ಬೆಕ್ಕನ್ನು ಹುಲಿ ಮಾಡಿದ ಭೂಪ: ವಾಟ್ಸ್ಆ್ಯಪ್ನಲ್ಲಿ ಮಾರಾಟಕ್ಕಿಟ್ಟು ಪೊಲೀಸರ ಕೈಗೆ ಸಿಕ್ಕಿಬಿದ್ದ