More

    ಸಿಇಟಿ ಪರೀಕ್ಷೆಯ ದಿನಾಂಕ ಫಿಕ್ಸ್‌: ಈ ಅಂಕಗಳ ಆಧಾರದ ಮೇಲೆಯೇ ರ‍್ಯಾಂಕ್- ಎಕ್ಸಾಂ ವಿಶೇಷತೆಗಳೇನು?

    ಬೆಂಗಳೂರು: ವೃತ್ತಿಪರ ಕೋರ್ಸ್ ಸೀಟು ಹಂಚಿಕೆಗೆ ಈ ವರ್ಷ ಕೇವಲ ಸಿಇಟಿ ಪರೀಕ್ಷೆಯ ಅಂಕಗಳೇ ಮಾನದಂಡವನ್ನಾಗಿ ಪರಿಗಣಿಸುವುದಾಗಿ ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಇಲಾಖೆ ಸಚಿವ ಅಶ್ವತ್ಥನಾರಾಯಣ ಅಶ್ವತ್ಥನಾರಾಯಣ ಹೇಳಿದ್ದಾರೆ.

    ಇಂದು ನಡೆದ ಸಭೆಯಲ್ಲಿ ಮಾತನಾಡಿದ ರಾಜ್ಯಾದ್ಯಂತ ಕೆಸಿಇಟಿ ಪರೀಕ್ಷೆಯನ್ನು 500ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಆಗಸ್ಟ್ 28, 29 ಹಾಗೂ 30ರಂದು ನಡೆಸಲಾಗುವುದು ಎಂದರು. ಇಷ್ಟು ವರ್ಷ ಸೀಟು ಹಂಚಿಕೆಗೆ ಪಿಯುಸಿಯ ಶೇ.50 ಅಂಕ ಪರಿಗಣಿಸಲಾಗುತ್ತಿತ್ತು. ಆದರೆ ಈ ಬಾರಿ ಕೇವಲ ಸಿಇಟಿ ಅಂಕಗಳೇ ಮಾನದಂಡವಾಗಲಿದೆ.

    ಪದವಿ ಕಾಲೇಜುಗಳಿಗೆ, ಇತರ ಕೋರ್ಸ್‌ಗಳಿಗೆ ಪ್ರವೇಶ ನೀಡುವ ದೃಷ್ಟಿಯಿಂದ ಅಗತ್ಯವಿರುವ ಪೂರ್ವ ಸಿದ್ಧತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ವಿಜ್ಞಾನ ವಿಭಾಗದ ಡಿಗ್ರಿ ವಿದ್ಯಾರ್ಥಿಗಳ ಪ್ರವೇಶವನ್ನು CET ಮುಖಾಂತರವೇ ನಿರ್ಧರಿಸುವ ಚಿಂತನೆಯಿದೆ. ಪಿಯುಸಿ ಅಂಕಗಳ ವಿಚಾರವಾಗಿ ನೀತಿಯಲ್ಲಿ ಅಗತ್ಯ ತಿದ್ದುಪಡಿ ತರಲಾಗುವುದು ಎಂದು ಸಚಿವರು ಹೇಳಿದರು. ದ್ವಿತೀಯ ಪಿಯುಸಿ (ವಿಜ್ಞಾನ) ಪಾಸಾದ ಪ್ರತೀ ವಿದ್ಯಾರ್ಥಿಯೂ ಸಿಇಟಿ ಬರೆಯಲು ಅವಕಾಶವಿದೆ ಎಂದು ಅವರು ತಿಳಿಸಿದರು.

    ಕರೊನಾ ಹೆಚ್ಚಳವಾದರೆ ಪರೀಕ್ಷೆಯ ದಿನಾಂಕಗಳನ್ನು ಮುಂದೂಡಲಾಗುವುದು. ಇಲ್ಲದೇ ಹೋದರೆ ಈ ರೀತಿ ಸಿಇಟಿ ಪರೀಕ್ಷೆಗಳು ನಡೆಯಲಿವೆ:
    ಆಗಸ್ಟ್ 28 – ಜೀವಶಾಸ್ತ್ರ, ಗಣಿತ
    ಆಗಸ್ಟ್ 29 – ಭೌತಶಾಸ್ತ್ರ, ರಸಾಯನಶಾಸ್ತ್ರ
    ಆಗಸ್ಟ್ 30 – ಗಡಿನಾಡು, ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ

    ಸಿಇಟಿ, ನೀಟ್ ಸೇರಿ ರಾಜ್ಯದಲ್ಲಿ ನಡೆಯುವ ಎಲ್ಲ ವೃತ್ತಿಪರ ಕೋರ್ಸುಗಳಿಗೆ ಪಿಯುಸಿ ಅಂಕವನ್ನು ಪರಿಗಣನೆ ಮಾಡದಿರಲು ನಿರ್ಧರಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.ಸುರೇಶ್‌ ಕುಮಾರ್‌ ಅವರು ಈ ನಿಟ್ಟಿನಲ್ಲಿ ನೀಡಿದ್ದ ಸಲಹೆಯನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.

    “ಎಲ್ಲ ಐಚ್ಛಿಕ ವಿಷಯಗಳ ಪರೀಕ್ಷೆ 28 ಮತ್ತು 29ರಂದು ನಡೆಯುತ್ತದೆ. ಉಳಿದಂತೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಅಗಸ್ಟ್ 30ರಂದು ಪರೀಕ್ಷೆ ನಡೆಯಲಿದೆ. ಮೊದಲು ಯಾವ ಪದ್ಧತಿಯಲ್ಲಿ ಪರೀಕ್ಷೆ ನಡೆಯುತ್ತಿತ್ತೋ ಅದೇ ರೀತಿ ಪರೀಕ್ಷೆ ನಡೆಯುತ್ತದೆ. ಪ್ರತಿ ವಿಷಯಕ್ಕೆ 60 ಅಂಕ ಇರುತ್ತದೆ. ಮೊದಲ ದಿನ ಗಣಿತ ಮತ್ತು ಜೀವವಿಜ್ಞಾನ ಹಾಗೂ ಎರಡನೇ ದಿನ ಭೌತವಿಜ್ಞಾನ & ರಸಾಯನಿಕ ವಿಜ್ಞಾನ ಇರುತ್ತದೆ ಎಂದರು ಅವರು.

    ಅಂಕಗಳ ಮಿತಿ ಇಲ್ಲ, ವಿನಾಯಿತಿಯ ವಿವರ:

    ಸಿಇಟಿಯಲ್ಲಿ ಎಂಜಿನಿಯರಿಂಗ್, ಪಶುವೈದ್ಯ, ಕೃಷಿ ವಿಜ್ಞಾನ, ಆರ್ಕಿಟೆಕ್ಟ್, ಫಾರ್ಮಸಿ ಪ್ರವೇಶ ಪರೀಕ್ಷೆಗೆ ಇದ್ದ ʼಅರ್ಹ ಅಂಕʼಗಳ ಷರತ್ತನ್ನು ತೆಗೆದು ಹಾಕಲಾಗಿದೆ. ಕೇವಲ ಸಿಇಟಿ ಅಂಕಗಳ ಆಧಾರದ ಮೇಲೆ ಮಾತ್ರ ರ್ಯಾಂಕ್‌ ಕೊಡಲಾಗುವುದು. ವೃತ್ತಿಪರ ಎಂಜಿನಿಯರಿಂಗ್ ಕೋರ್ಸ್ʼಗೆ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳಲ್ಲಿ ಸಿಇಟಿ ಬರೆಯಲು ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ ಶೇ.45 ಹಾಗೂ ಪರಿಶಿಷ್ಟ ಜಾತಿ-ವರ್ಗದ ಅಭ್ಯರ್ಥಿಗಳು ಶೇ.40ರಷ್ಟು ಅಂಕಗಳನ್ನು ಗಳಿಸಬೇಕೆಂಬ ಷರತ್ತು ಇತ್ತು. ಆದರೆ ಈಗ ಬದಲಿಸಿದ್ದು, ಪಿಸಿಎಂ ಹಾಗೂ ನಿಗದಿತ ಐಚ್ಛಿಕ ವಿಷಯಗಳಲ್ಲಿ ಉತ್ತೀರ್ಣರಾಗಿರುವ ಎಲ್ಲ, ಅಂದರೆ ಜಸ್ಟ್ ಪಾಸ್ ಆಗಿರುವ ವಿದ್ಯಾರ್ಥಿಗಳು ಕೂಡ ಸಿಇಟಿ ಬರೆಯಲು ಅರ್ಹತೆ ಹೊಂದಿರುತ್ತಾರೆ. ಅಂಕಗಳ ಮಿತಿ ಸಡಿಲಿಕೆ ಮಾಡಿರುವ ಬಗ್ಗೆ ಎಲ್ಲ ಸಂಬಂಧಿತ ಪರೀಕ್ಷಾ ಮಂಡಳಿಗಳು, ಇನ್ನಿತರೆ ಸಂಬಂಧಿತ ಎಲ್ಲ ಸಂಸ್ಥೆಗಳಿಗೆ ಸರಕಾರ ಪತ್ರ ಬರೆಯಲಿದೆ ಎಂದು ಡಿಸಿಎಂ ಇದೇ ವೇಳೆ ತಿಳಿಸಿದರು.

    2021-22ನೇ ವರ್ಷಕ್ಕೆ ಮಾತ್ರ:

    ಎಂಜಿನಿಯರಿಂಗ್ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ರಾಂಕ್ ನಿರ್ಧರಿಸಲು ಪ್ರಸ್ತುತ ನಿಯಮದಲ್ಲಿ ಇರುವಂತೆ ಅರ್ಹತಾ ಪರೀಕ್ಷೆ ಮತ್ತು ಸಿಇಟಿ ಪರೀಕ್ಷೆಯಲ್ಲಿ ಪಡೆದ ಪಿಸಿಎಂ ವಿಷಯಗಳ ಅಂಕಗಳನ್ನು ಸಮನಾಗಿ ಪರಿಗಣಿಸಿ ಸಿಇಟಿ ರಾಂಕ್ ನೀಡಲಾಗುತ್ತಿತ್ತು. ಅದರ ಬದಲಿಗೆ ಈಗ ಕೇವಲ ಸಿಇಟಿ ಪರೀಕ್ಷೆಯಲ್ಲಿನ ಪಿಸಿಎಂ ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳನ್ನು ಮಾತ್ರ ಪರಿಗಣಿಸಿ ಎಂಜಿನಿಯರಿಂಗ್ ರಾಂಕ್ ಕೊಡಲಾಗುವುದು. ಈ ಬದಲಾವಣೆ 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯವಾಗುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

    ಜೂನ್ 15ರಿಂದ ನೋಂದಣಿ:

    ಸಿಇಟಿ ಬರೆಯಲಿಚ್ಛಿಸುವ ವಿದ್ಯಾರ್ಥಿಗಳು ಜೂನ್ 15ರಿಂದಲೇ ಆನ್ ಲೈನ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಳ್ಳಬೇಕು ಎಂದು ಅವರು ಮಾಹಿತಿ ನೀಡಿದರು.

    ಸಿಇಟಿಗೂ ನೀಟ್ ನಂತೆ ಅಂಕ ಮಿತಿ?:

    ಇದೇ ವೇಳೆ ನೀಟ್ ನಲ್ಲಿ ಇಂತಿಷ್ಟು ಅಂಕ ಗಳಿಸಿದರೆ ಮಾತ್ರ ವೈದ್ಯ ಕೋರ್ಸುಗಳಿಗೆ ಪ್ರವೇಶ ಇದೆ. ಅದೇ ಪದ್ಧತಿಯನ್ನು ಸಿಇಟಿಯಲ್ಲೂ ತರುವ ಉದ್ದೇಶವಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಗುಣಮಟ್ಟದ ದೃಷ್ಟಿಯಲ್ಲಿ ಸರಕಾರ ಈ ನಿಟ್ಟಿನಲ್ಲಿ ಚಿಂತಿಸುತ್ತಿದೆ. ಪಾಸಾದವರೆಲ್ಲ ಎಂಜಿನಿಯರಿಂಗ್ ಸೇರುತ್ತಿದ್ದಾರೆ. ಆದ್ದರಿಂದ ಗುಣಮಟ್ಟಕ್ಕೆ ಧಕ್ಕೆಯಾಗುತ್ತಿದೆ ಎಂದರು ಅವರು.

    ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಕುಮಾರ್ ನಾಯಕ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ವೆಂಕಟರಾಜ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ ಅವರು ಸಭೆಯಲ್ಲಿ‌ ಹಾಜರಿದ್ದರು.

    ವಿಜ್ಞಾನ ಪದವಿ ಕೋರ್ಸುಗಳಿಗೂ ಸಿಇಟಿ ಅಂಕ ಚಿಂತನೆ: 2021ನೇ ಸಾಲಿನಲ್ಲಿ ಪಿಯುಸಿಯ ಎಲ್ಲ ವಿದ್ಯಾರ್ಥಿಗಳು ಪಾಸಾಗಿದ್ದಾರೆ. 6ರಿಂದ 7ಲಕ್ಷ ವಿದ್ಯಾರ್ಥಿಗಳು ಪಿಯುಸಿಯಿಂದ ಹೊರಬರುತ್ತಿದ್ದಾರೆ. ಮೊದಲು ಕೊನೆ ಪಕ್ಷ 4 ಲಕ್ಷ ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ವಿದ್ಯಾರ್ಥಿಗಳು ಮಾತ್ರ ಪಾಸಾಗುತ್ತಿದ್ದರು. ಈ ಬಾರಿ 30% ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ಇವರಲ್ಲಿ ಅನೇಕರು ಪದವಿ ಕಾಲೇಜುಗಳಿಗೆ ಸೇರಲಿದ್ದು, ಅಲ್ಲಿನ ವ್ಯವಸ್ಥೆ ಹೆಚ್ಚಿಸುವ ಕೆಲಸ ಮಾಡಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

    ವಿಜ್ಞಾನ ವಿಭಾಗದಲ್ಲಿ ಗುಣಮಟ್ಟಕ್ಕೆ ಆದ್ಯತೆ ಕೊಡುವ ಉದ್ದೇಶದಿಂದ ಅದಕ್ಕೆ ಸಂಬಂಧಿಸಿದ ಎಲ್ಲ ಪದವಿ ಕೋರ್ಸುಗಳಿಗೆ ಸಿಇಟಿ ಅಂಕಗಳನ್ನು ಆಧರಿಸಿಯೇ ಪ್ರವೇಶ ನೀಡುವ ಯೋಚನೆ ಮಾಡಲಾಗುತ್ತಿದೆ. ಈ ಬಗ್ಗೆ ವಿಸ್ತೃತವಾಗಿ ಚಿಂತಿಸಲಾಗುತ್ತಿದೆ. ಯಾವುದೂ ಅಂತಿಮವಾಗಿಲ್ಲ ಎಂದು ಅವರು ಹೇಳಿದರು.

    ದ್ವಿತೀಯ ಪಿಯುಸಿ ಪರೀಕ್ಷೆ ರದ್ದು- ಹಾಗಿದ್ದರೆ ಅಂಕ ಹೇಗೆ? ಇಲ್ಲಿದೆ ನೋಡಿ ಮಾಹಿತಿ…

    ಜುಲೈ 3ನೇ ವಾರ ಎಸ್‌ಎಸ್ಎಲ್‌ಸಿ ಪರೀಕ್ಷೆ: ಆದರೆ ಮುಂಚಿನಂತೆ ಅಲ್ಲ- ಏನೇನು ವಿಶೇಷತೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts