ಮಂಡ್ಯ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ವೃದ್ಧಿಗೆ ಪ್ರಾರ್ಥಿಸಿ ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು.
ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್, ಮಂಡ್ಯ ವಿಶ್ವವಿದ್ಯಾನಿಲಯದ ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಂಡಳಿ ನಾಮ ನಿರ್ದೇಶಕ ಡಾ.ಇಂದ್ರೇಶ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಿರಿಯ ನಾಯಕರು ಬೇಗ ಚೇತರಿಸಿಕೊಳ್ಳಲಿ ಎಂದು ದೇವರ ಬಳಿ ಪ್ರಾರ್ಥಿಸಿದರು.
ಸಿ.ಪಿ.ಉಮೇಶ್ ಮಾತನಾಡಿ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ರಾಜ್ಯಕ್ಕೆ ಮತ್ತು ದೇಶಕ್ಕೆ ನೀಡಿರುವ ಕೊಡುಗೆ ಅಪಾರ. ದೇವರ ದಯೆಯಿಂದ ಅವರು ಶೀಘ್ರ ಗುಣಮುಖರಾಗಲಿ. ಅವರು ಕೇಂದ್ರ ವಿದೇಶಾಂಗ ಸಚಿವರಾಗಿ, ಮುಖ್ಯಮಂತ್ರಿಯಾಗಿ, ರಾಜ್ಯಪಾಲ ಸೇರಿದಂತೆ ಹಲವಾರು ಉನ್ನತ ಹುದ್ದೆಗಳನ್ನು ಅಲಂಕರಿಸಿ ದೇಶಕ್ಕೆ ಅನುಕೂಲವಾಗುವಂತಹ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸರಳ ಸಜ್ಜನಿಕೆಗೆ ಹೆಸರುವಾಸಿಯಾದ ಎಸ್ಎಂಕೆ ಅವರು ತಮ್ಮ ಆಡಳಿತಾವಧಿಯಲ್ಲಿ ರೈತ, ಕೂಲಿ ಕಾರ್ಮಿಕ, ಹಿಂದುಳಿದ, ಅಲ್ಪ ಸಂಖ್ಯಾತ ಸೇರಿದಂತೆ ಎಲ್ಲ ವರ್ಗದವರಿಗೂ ಅನುಕೂಲ ಕಲ್ಪಿಸಿದ್ದಾರೆ. ದೇವರು ಅವರನ್ನು ಶೀಘ್ರವಾಗಿ ಗುಣಮುಖರಾಗಿವಂತೆ ಮಾಡಿ ಮತ್ತಷ್ಟು ಜನಪರ ಕೆಲಸ ಮಾಡಲು ಉತ್ತಮ ಆರೋಗ್ಯ ಮತ್ತು ಆಯಸ್ಸು ನೀಡಲಿ ಎಂದು ಪ್ರಾರ್ಥಿಸಿದರು. ಬಿಜೆಪಿ ಮುಖಂಡರಾದ ಹೊನ್ನಲಗೆರೆ ಸ್ವಾಮಿ, ಪೂರ್ಣಿಮಾ, ಸಿಂಧು ಇದ್ದರು.