ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅದರ ಜತೆಗೆ ಕರೊನಾದಿಂದ ಬಿಡುಗಡೆ ಹೊಂದಿರುವ ಸಂತಸ ಕೂಡ.
ಕಳೆದ ಮಂಗಳವಾರ ಕೋವಿಡ್ 19 ಪಾಸಿಟಿವ್ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದೆ.
ತಮಗೆ ಸೋಂಕು ಬಂದಿದ್ದರ ಕುರಿತು ಟ್ವೀಟ್ ಮಾಡಿದ್ದ ಇವರು, ನನ್ನ ಕರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿದ್ದವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದರು.
ನಂತರ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಇದ್ದುಕೊಂಡೇ ಸಾಕಷ್ಟು ರಾಜಕೀಯ ಚಟುವಟಿಕೆಗಳನ್ನು ಮಾಡುತ್ತಿದ್ದ ಇವರು, ಇದೀಗ ಸಂಪೂರ್ಣ ಗುಣಮಖರಾಗಿದ್ದಾರೆ.
ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆಕೋರರಿಗೆ ಸಿಎಂ ಬಿಎಸ್ವೈ ಖಡಕ್ ಎಚ್ಚರಿಕೆ
ನಿನ್ನೆ ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ಬಂದಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆರಂಭದ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮತ್ತೆ ನಾಲ್ಕು ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ.
ನಟ ಸಂಜಯ್ ದತ್ಗೆ ಕ್ಯಾನ್ಸರ್ – ಚಿಕಿತ್ಸೆಗೆ ವಿದೇಶದ ಪ್ರಯಾಣ ಸಾಧ್ಯತೆ