ರಾಯಚೂರು: ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಹೋಳಿ ಹಬ್ಬವನ್ನು ಸಡಗರ, ಸಂಭ್ರಮದಿಂದ ಸೋಮವಾರ ಆಚರಿಸಲಾಯಿತು. ಜನರು ರಂಗು ರಂಗಿನ ಬಣ್ಣದಲ್ಲಿ ಮಿಂದೆದ್ದು ಸಂಭ್ರಮಿಸಿದರು.
ನಗರದ ವಿವಿಧ ಬಡಾವಣೆಗಳ್ಲಲಿ ಭಾನುವಾರ ತಡರಾತ್ರಿ ಕಾಮದಹನ ನಡೆಸಿದ ನಂತರ ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಒಬ್ಬರಿಗೊಬ್ಬರು ಬಣ್ಣ ಹಚ್ಚುವ ಮೂಲಕ ಶುಭಾಷಯ ವಿನಿಮಯ ಮಾಡಿಕೊಂಡರು.
ಹಲವಾರು ಬಡಾವಣೆಗಳಲ್ಲಿ ಪ್ರತ್ಯೇಕವಾಗಿ ಓಕಳಿಗೆ ವ್ಯವಸ್ಥೆ ಮಾಡಲಾಗಿತ್ತು. ಮಹಿಳೆಯರು ಮತ್ತು ಮಕ್ಕಳು ಒಬ್ಬರಿಗೊಬ್ಬರು ಬಣ್ಣ ಹಚ್ಚುವ ಮೂಲಕ ಸಂಭ್ರಮಾಚರಣೆ ನಡೆಸಿದರು. ಯುವಕರು ಮಧ್ಯಾಹ್ನದ ನಂತರ ಕೃಷ್ಣಾ ಮತ್ತು ತುಂಗಭದ್ರಾ ನದಿಗೆ ತೆರಳಿ ಪುಣ್ಯಸ್ನಾನ ಮಾಡಿದರು.
ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ಬಾರಿ ಹೋಲಿ ಹಬ್ಬದ ಸಂಭ್ರಮಾಚರಣೆ ಅದ್ಧೂರಿಯಾಗಿ ಕಂಡು ಬರಲಿಲ್ಲ. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಪ್ರಮುಖ ರಸ್ತೆಗಳು ವಾಹನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿದ್ದವು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭದ ದಿನವೇ ಹೋಳಿ ಹಬ್ಬ ಬಂದಿದ್ದರಿಂದ ಹಬ್ಬದ ಸಂಭ್ರಮ ಕಡಿಮೆಯಾದಂತಾಗಿತ್ತು. ಬಣ್ಣದಲ್ಲಿ ಮುಳಿಗೇಳುತ್ತಿದ್ದ ವಿದ್ಯಾರ್ಥಿಗಳು ಪರೀಕ್ಷೆಗೆ ತೆರಳುವ ಗಡಿಬಿಡಿಯಲ್ಲಿದ್ದು, ಪಾಲಕರು ಕೂಡಾ ಮಕ್ಕಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಬಿಟ್ಟು ಬರುವ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದರು. ಜನರು ಕೂಡಾ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಯಾವುದೇ ಕಿರಿಕಿರಿ ಮಾಡದೇ ತಮ್ಮ ಪಾಡಿಗೆ ತಾವು ಹಬ್ಬದ ಆಚರಣೆಯಲ್ಲಿ ತೊಡಗಿದ್ದರು. ಸರ್ಕಾರಿ ಕಚೇರಿಗಳು ಕೂಡಾ ಜನರ ಓಡಾಟವಿಲ್ಲದೆ ಬಣಗುಡುತ್ತಿದ್ದವು.