ಸಾಗರ: ಸಾಗರ ಉಪವಿಭಾಗದ ನಾಲ್ಕು ತಾಲೂಕುಗಳಲ್ಲಿ ಡಿ. 27ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು ಪ್ರಾಥಮಿಕ ಹಂತದಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ವಿ.ಪ್ರಸನ್ನ ಹೇಳಿದರು.
ಉಪವಿಭಾಗಾಕಾರಿ ಕಚೇರಿ ಸಭಾಂಗಣದಲ್ಲಿ ಗ್ರಾಪಂ ಚುನಾವಣಾ ಮೇಲುಸ್ತುವಾರಿ ಸಮಿತಿ ಅಧಿಕಾರಿಗಳ ಜತೆ ಸಭೆ ನಡೆಸಿ, ಜಿಲ್ಲಾಧಿಕಾರಿಗಳು ಪ್ರತಿ ತಾಲೂಕಿಗೆ ಮಾದರಿ ನೀತಿ ಸಂಹಿತೆ ತಂಡ ರಚನೆ ಮಾಡಿದ್ದಾರೆ ಎಂದರು.
ತಹಸೀಲ್ದಾರ್, ತಾಪಂ ಕಾರ್ಯನಿರ್ವಾಹಣಾಧಿಕಾರಿಗಳು, ಆಯಾ ತಾಲೂಕಿನ ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು, ಸರ್ಕಲ್ ಇನ್ಸ್ಪೆಕ್ಟರ್ ಒಳಗೊಂಡಂತೆ ಆರು ಜನರ ತಂಡ ರಚಿಸಲಾಗಿದೆ. ಇವರು ತಮ್ಮ ತಾಲೂಕು ವ್ಯಾಪ್ತಿಯಲ್ಲಿ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳದ್ದಾರೆ.
ಗ್ರಾಪಂನಲ್ಲಿ ನೀತಿ ಸಂಹಿತೆ ತಂಡ: ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆಯವರು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ನೀತಿ ಸಂಹಿತೆ ಕಾಪಾಡಲು ತಂಡ ರಚನೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಣ್ಣ ಅಂಗಡಿ, ಬೀಡಾ ಅಂಗಡಿ, ಮಿಲ್ಟ್ರಿ ಹೋಟೆಲ್, ನಾನ್ವೆಜ್ ಹೋಟೆಲ್ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡದಂತೆ ನಿಗಾವಹಿಸಲು ಸೂಚನೆ ನೀಡಲಾಗಿದೆ.
ಜತೆಗೆ ನೀತಿ ಸಂಹಿತೆ ತಂಡಗಳು ಗ್ರಾಪಂ ವ್ಯಾಪ್ತಿಯಲ್ಲಿ ರೌಂಡ್ಸ್ ಹೋಗುವಾಗ ಅಕ್ರಮ ಮದ್ಯ ಮಾರಾಟ ಕಂಡು ಬಂದಲ್ಲಿ ಅಂತಹ ಅಂಗಡಿಗಳನ್ನು ಬಂದ್ ಮಾಡಲು ಸಹ ಅಧಿಕಾರ ನೀಡಲಾಗಿದೆ. ಜತೆಗೆ ಅಬಕಾರಿ ಮತ್ತು ಪೊಲೀಸ್ ಇಲಾಖೆ ತಂಡ ಭೇಟಿ ನೀಡಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಪರಿಶೀಲನೆ ನಡೆಸುತ್ತದೆ. ಅಕ್ರಮ ಮದ್ಯ ಮಾರಾಟ ಕಂಡು ಬಂದಲ್ಲಿ ಅಂಗಡಿ ಸೀಜ್ ಮಾಡಿ, ಪ್ರಕರಣ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ನಿರ್ಭಯವಾಗಿ ಮತದಾನ ಮಾಡಲು ಬೇಕಾದ ಎಲ್ಲ ವ್ಯವಸ್ಥೆಯನ್ನು ತಾಲೂಕು ಆಡಳಿತ ಮಾಡಿದೆ. ಮತದಾರರು ಮತದಾನ ಮಾಡುವ ಸಂದರ್ಭದಲ್ಲಿ ಪ್ರಜಾಪ್ರಭುತ್ವ ಮೌಲ್ಯ ಉಳಿಸುವ ಹೊಣೆ ನಿಮ್ಮ ಮೇಲಿದೆ ಎನ್ನುವುದನ್ನು ಅರಿತು ಮತ ಚಲಾವಣೆ ಮಾಡಬೇಕು ಎಂದು ತಿಳಿಸಿದರು.
ಡಿವೈಎಸ್ಪಿ ವಿನಾಯಕ್ ಶೆಟ್ಟಿಗಾರ್, ತಹಸೀಲ್ದಾರ್ ಚಂದ್ರಶೇಖರ ನಾಯ್್ಕ ಪೌರಾಯುಕ್ತ ಎಚ್.ಕೆ.ನಾಗಪ್ಪ, ಅಧಿಕಾರಿಗಳಾದ ಟಿ.ಪರಮೇಶ್ವರ್, ಬಾಲಚಂದ್ರ, ಹೇಮಂತ್ ಡೊಳ್ಳೆ, ಸುರೇಶ್, ಕುಮಾರಸ್ವಾಮಿ ಇದ್ದರು.