ಬೆಳಗಾವಿ: ಖಾನಾಪುರ ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ ರೈತ ಸಂಘ, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿರ್ಮೂಲನೆ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಖಾನಾಪುರ ತಾಲೂಕಿನ ಪಡಲವಾಡಿ ಕಾಡಿನಲ್ಲಿ ಅಕ್ರಮ ಮರಳು ದಂಧೆ ನಿರಾತಂಕವಾಗಿ ನಡೆಯುತ್ತಿದೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕೆಲವು ಕಡೆ ಅಧಿಕಾರಿಗಳ ಸಮ್ಮುಖದಲ್ಲಿಯೇ ಮರುಳು ದಂಧೆ ನಡೆಯುತ್ತಿದ್ದರೂ ಕ್ರಮ ವಹಿಸಿಲ್ಲ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಅಕ್ರಮ ಮರಳು ದಂಧೆ ನಡೆಸುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಗಂಗಾಧರ ದೊಡ್ಡಮನಿ, ರಾಮ ಬನವಣಿ, ಮಹೇಶ, ಭೈರು ಕಾಂಬಳೆ, ಯುವರಾಜ ಅಷ್ಟೇಕರ, ಕಾಳಪ್ಪ ರಾಮಚಂದ್ರಣ್ಣವರ, ರವಿ ಬಸ್ತವಾಡಕರ, ಸುಧೀರ ಸಂಭಾಜಿ ಇದ್ದರು.