ಮಂಡ್ಯ: ಮಹಿಳೆಯರು ಕೀಳರಿಮೆ ಬಿಟ್ಟು ಸಮುದಾಯ ಮತ್ತು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ರಾಜ್ಯ ಮಹಿಳಾ ಸಹಕಾರ ಮಹಾಮಂಡಲದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ತಿಳಿಸಿದರು.
ನಗರದ ನೆಹರು ಯುವ ಕೇಂದ್ರದಲ್ಲಿ ರಾಜ್ಯ ಮಹಿಳಾ ಸಹಕಾರ ಮಹಾಮಂಡಲ, ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ಒಂದು ದಿನದ ವಿಷಯಾಧಾರಿತ ಮಹಿಳಾ ಜಾಗೃತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಮುಂದಿದ್ದಾರೆ. ಅದೇ ರೀತಿ ಸಹಕಾರ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಸ್ವಸಹಾಯ ಸಂಘಗಳ ಮೂಲಕ ಉತ್ತಮ ಆರ್ಥಿಕ ಚಟುವಟಿಕೆ ನಡೆಸುತ್ತಿದ್ದಾರೆ. ಆದರೂ, ಕೆಲವರು ಕೀಳರಿಮೆ ಹೊಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಹಿಳೆಯರು ಮೊದಲು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಆರೋಗ್ಯ ಕಾಪಾಡಿಕೊಂಡರೆ, ಮನೆಯ ಆರೋಗ್ಯ ಕಾಪಾಡಿಕೊಂಡಂತೆ. ಮನೆ ಆರೋಗ್ಯವಾಗಿದ್ದರೆ ಸಮಾಜ ಆರೋಗ್ಯವಾಗಿದ್ದಂತೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಚಿಂತಿಸುವುದು ಅಗತ್ಯ ಎಂದರು.
ಜಿಲ್ಲಾ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷೆ ಶಾರದಮ್ಮ ಮಾತನಾಡಿ, ಪುರುಷರ ಸಹಕಾರ ಕ್ಷೇತ್ರದ ಸಂಘಗಳು ದೊಡ್ಡದಾಗಿ ಬೆಳೆದಿದ್ದರೂ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿಂದ ಅಸ್ತಿತ್ವ ಕಳೆದುಕೊಂಡಿರುವುದನ್ನು ಕಾಣುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗೀಗೌಡ, ಕೌಶಲಾಭಿವೃದ್ಧಿ ಕೇಂದ್ರದ ನಾಗಾನಂದ, ಜಿಲ್ಲಾ ಸಹಕಾರ ಒಕ್ಕೂಟದ ಮಾಜಿ ಅಧ್ಯಕ್ಷ ಎಸ್.ನಾಗೇಂದ್ರ ಇತರರಿದ್ದರು.