ಶಿವಮೊಗ್ಗ: ಭ್ರೂಣ ಹತ್ಯೆ ತಡೆಯುವ ಉದ್ದೇಶದಿಂದ ಜಿಲ್ಲೆಯ ಎಲ್ಲ ಸ್ಕ್ಯಾನಿಂಟ್ ಸೆಂಟರ್ಗಳ ಪರಿಶೀಲನೆ ನಡೆಸಬೇಕು. ಭ್ರೂಣ ಲಿಂಗ ಪತ್ತೆಗೆ ಸಂಬಂಧಿಸಿದ ಕಾಯ್ದೆ ಅನ್ವಯ ಸ್ಕ್ಯಾನಿಂಗ್ ಸೆಂಟರ್ಗಳು ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಾತ್ರಪಡಿಸಿಕೊಳ್ಳಬೇಕೆಂದು ಡಿಎಚ್ಒ ಡಾ. ರಾಜೇಶ್ ಸುರಗೀಹಳ್ಳಿ ತಿಳಿಸಿದರು.
ತಮ್ಮ ಕಚೇರಿಯಲ್ಲಿ ಪಿಸಿಪಿಎಂಡಿಟಿ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ 9 ನೋಂದಾಯಿತ ಸರ್ಕಾರಿ ಸ್ಕ್ಯಾನಿಂಗ್ ಸೆಂಟರ್ಗಳು ಮತ್ತು 90 ಖಾಸಗಿ ಸೆಂಟರ್ಗಳಿವೆ. ಸರ್ಕಾರಿ ಸಂಸ್ಥೆಗಳಲ್ಲಿ ಒಟ್ಟು 24 ಹಾಗೂ ಖಾಸಗಿ ಸಂಸ್ಥೆಗಳಲ್ಲಿ 141 ಸ್ಕ್ಯಾನಿಂಗ್ ಯಂತ್ರಗಳಿವೆ. ಶಿವಮೊಗ್ಗ ನಗರದಲ್ಲೇ 52 ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಿದ್ದು, ಎಲ್ಲವೂ ಪಿಸಿಪಿಎಂಡಿಟಿ ಕಾಯ್ದೆ ಪ್ರಕಾರ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕೆಂದರು.
ಭ್ರೂಣಲಿಂಗ ಪತ್ತೆ ಮಾಡಿದ ವೈದ್ಯರಿಗೆ ಪ್ರಥಮ ಅಪರಾಧಕ್ಕೆ 3 ವರ್ಷಗಳ ಜೈಲು ಮತ್ತು 10 ಸಾವಿರ ರೂ. ದಂಡ ವಿಧಿಸಲಾಗುವುದು. 2ನೇ ಅಪರಾಧಕ್ಕೆ 5 ವರ್ಷಗಳವರೆಗೆ ಜೈಲು ಮತ್ತು 50 ಸಾವಿರ ರೂ. ದಂಡ ವಿಧಿಸಲಾಗುವುದು. ನ್ಯಾಯಾಲಯದಲ್ಲಿ ಅಪರಾಧ ನಿರ್ಣಯವಾಗುವ ತನಕ ಅವರ ನೋಂದಣಿ ತಡೆಹಿಡಿಯಲಾಗುವುದು. ಅಪರಾಧ ದೃಢಪಟ್ಟರೆ ಪ್ರಥಮ ಅಪರಾಧಕ್ಕೆ ರಾಜ್ಯ ವೈದ್ಯಕೀಯ ಮಂಡಳಿಯಿಂದ ವೈದ್ಯಕೀಯ ವೃತ್ತಿ ಮಾಡದಂತೆ ಅವರ ಹೆಸರನ್ನು ಐದು ವರ್ಷಗಳ ಕಾಲ ತೆಗೆದು ಹಾಕಲಾಗುವುದು. ನಂತರದ ಅಪರಾಧಕ್ಕೆ ಶಾಶ್ವತವಾಗಿ ಹೆಸರನ್ನು ತೆಗೆದು ಹಾಕಲಾಗುವುದು ಎಂದು ಡಿಎಚ್ಒ ಹೇಳಿದರು.
ಭ್ರೂಣ ಹತ್ಯೆಗೆ ಮಹಿಳೆ, ಆಕೆಯ ಪತಿ, ಸಂಬಂಧಿಕರು ಒತ್ತಾಯಿಸಿದರೆ ಅವರೂ ಶಿಕ್ಷಾರ್ಹ ಅಪರಾಧಿಗಳಾಗುತ್ತಾರೆ. ಮೊದಲ ಅಪರಾಧಕ್ಕೆ 3 ವರ್ಷಗಳವರೆಗೆ ಜೈಲು ಮತ್ತು 50 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳವರೆಗೆ ಜೈಲು ಮತ್ತು ಒಂದು ಲಕ್ಷ ರೂ. ದಂಡ ವಿಧಿಸಲು ಅವಕಾಶವಿದೆ. ಈ ಕುರಿತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಕಾರ್ಯಾಗಾರ ಸೇರಿದಂತೆ ವ್ಯಾಪಕವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆ ಬಗ್ಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಕ್ತ ತರಬೇತಿ ನೀಡಬೇಕು. ಗ್ರಾಮೀಣ ಮಟ್ಟದಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಮೂಲಕ ಭ್ರೂಣ ಹತ್ಯೆ ತಡೆಯಲು ಸಾಧ್ಯ ಎಂದು ಸಮಿತಿ ಸದಸ್ಯೆ ಡಾ. ವೀಣಾ ಭಟ್ ಅಭಿಪ್ರಾಯಪಟ್ಟರು.
ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಅನುಷ್ಠಾನ ಸಮಿತಿ ಸದಸ್ಯರಾದ ಡಾ.ನಾಗರಾಜ ನಾಯಕ್, ಡಾ.ಅರುಣ್, ಡಾ.ಮಂಜುನಾಥ್ ನಾಗಲೀಕರ್ ಮುಂತಾದವರಿದ್ದರು.