ಮುಂಬೈ: ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಸಲ್ಮಾನ್ ಖಾನ್ ಹಾಗೂ ಅವರ ತಂದೆ ಸಲೀಂ ಖಾನ್ಗೆ ಭಾರೀ ಭದ್ರತೆ ನೀಡಲಾಗಿದೆ.ಪಂಜಾಬಿ ಖ್ಯಾತ ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು, ಈ ಬೆನ್ನಲ್ಲೇ ಸೋಮವಾರ ಬೆದರಿಕೆ ಪತ್ರಗಳು ಬಂದಿದ್ದವು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈ ಪೊಲೀಸರು ಕೂಡಲೇ ಸಲ್ಮಾನ್ ನಿವಾಸಕ್ಕೆ ಭೇಟಿ ನೀಡಿದ್ದು, ಅವರಿಗೆ ಭದ್ರತೆಯನ್ನೂ ಹೆಚ್ಚಿಸಿದ್ದಾರೆ. ಈ ನಡುವೆ ಅವರ ತಂದೆ ಸಲೀಂ ಖಾನ್ಗೂ ಭದ್ರತೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಇದಕ್ಕೆ ಕಾರಣ, ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಪ್ರಮುಖ ಆರೋಪಿಯಾಗಿರುವುದು. ಈತನಿಗೂ ಸಲ್ಮಾನ್ ಖಾನ್ಗೂ ಏನು ಸಂಬಂಧ ಎಂದರೆ ಈ ಹಿಂದೆ ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು ಬಿಷ್ಣೋಯ್ ಸಂಚು ರೂಪಿಸಿದ್ದ ಎನ್ನಲಾಗಿದೆ.
2018ರಲ್ಲಿ ರಾಜಸ್ಥಾನದಲ್ಲಿ ಕೃಷ್ಣಮೃಗ ಬೇಟೆ ಆಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಜೈಲಿಗೆ ಹೋಗಿದ್ದರು. ಈ ಸಮಯದಲ್ಲಿ ಕೋರ್ಟ್ ಹೊರಗೆ ಮಾತನಾಡಿದ್ದ ಬಿಷ್ಣೋಯ್, ಸಲ್ಮಾನ್ ಖಾನ್ನನ್ನು ಕೊಲ್ಲುತ್ತೇವೆ ಎಂದು ಹೇಳಿಕೆ ನೀಡಿದ್ದ. ಬಿಷ್ಣೋಯ್ ಅವರ ನಿಕಟ ಸಂಪರ್ಕದಲ್ಲಿದ್ದ ರಾಹುಲ್ ಅಲಿಯಾಸ್ ಸುನ್ನಿಯನ್ನ 2020ರಲ್ಲಿ ಬಂಧನ ಮಾಡಲಾಗಿತ್ತು. ಈ ವೇಳೆ, ವಿಚಾರಣೆ ನಡೆಸಿದಾಗ ಸಲ್ಮಾನ್ ಖಾನ್ ಹತ್ಯೆ ಮಾಡಲು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ಸಲ ಸಲ್ಮಾನ್ ಖಾನ್ಗೆ ಬೆದರಿಕೆ ಸಹ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.
ನಟ ಸಲ್ಮಾನ್ ಖಾನ್ರನ್ನು ಕೊಲೆ ಮಾಡಲಾಗುವುದು ಎಂದು ಆ ಪತ್ರದಲ್ಲಿ ಬರೆಯಲಾಗಿದೆ. ಈ ಬಗ್ಗೆ ಕುಟುಂಬಸ್ಥರು ಬಾಂದ್ರಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. (ಏಜೆನ್ಸೀಸ್)
ನಿಜವಾಯ್ತು ಸಂದೇಹ: ಶೀಘ್ರದಲ್ಲೇ ನಿನ್ನ ಮರ್ಡರ್- ನಟ ಸಲ್ಮಾನ್ ಖಾನ್ ಟೇಬಲ್ ಮೇಲೆ ಬೆದರಿಕೆ ಪತ್ರ!