ಕನಕಗಿರಿ: ಉಪದೇಶ ಹೇಳುವುದಕ್ಕೆ ಸೀಮಿತವಾಗಿದೆಯೇ ಹೊರತು ಆಚರಣೆಯಲ್ಲಿ ಇಲ್ಲವಾಗಿದ್ದು, ನಮ್ಮೆಲ್ಲರ ಬದುಕಿಗೆ ಸಂವಿಧಾನವೇ ದಾರಿದೀಪವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಹೇಳಿದರು.
ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಜಿಪಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ, ಮಕ್ಕಳ ರಕ್ಷಣಾ ಘಟಕ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಕ್ಕಳಿಗೆ ಕಾನೂನು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಲ್ಲ ಧರ್ಮಗಳ ಸಾರ ಒಂದೇ. ಸಮಾಜದಲ್ಲಿ ಯಾರೂ ಮೇಲಲ್ಲ, ಯಾರೂ ಕೀಳಲ್ಲ. ನಮ್ಮ ಸಾಮಾಜಿಕ ಪರಿವರ್ತನೆ ಕಾನೂನಿನ ಮೂಲಕ ಆಗಬೇಕಿದ್ದು, ಪ್ರತಿಯೊಬ್ಬರಲ್ಲೂ ಕಾನೂನಿನ ತಿಳಿವಳಿಕೆ ಇರಬೇಕು. ನಮ್ಮ ಸುತ್ತ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳು ಗಮನಕ್ಕೆ ಬಂದರೆ ತಕ್ಷಣ ಪೊಲೀಸರ ಗಮನಕ್ಕೆ ತರಬೇಕು. ಇದರಿಂದ ಮುಂದಾಗಬಹುದಾದ ಅನಾಹುತ ತಪ್ಪಿಸಬಹುದು ಎಂದರು.
ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ ಮಾತನಾಡಿ, ಪಟ್ಟಣದಲ್ಲಿ ಕೆಲ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿಕೊಂಡು ಕೆಲ ಕಿಡಿಗೇಡಿಗಳು ಅಶ್ಲೀಲವಾಗಿ ಬರೆಯುತ್ತಿರುವುದು ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂಥದ್ದು. ಈ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ. ಶೀಘ್ರ ಪುಂಡರ ಬಂಧನವಾಗಲಿದೆ. ಈ ಘಟನೆಗೆ ಸಂಬಂಧಿಸಿ ವಿದ್ಯಾರ್ಥಿನಿಯರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುಪಾಕ್ಷ, ಅಲ್ಪ ಸಂಖ್ಯಾತ ಇಲಾಖೆಯ ತಾಲೂಕು ಅಧಿಕಾರಿ ಶ್ರೀನಿವಾಸ, ಮೌಲಾನಾ ಆಜಾದ್ ಶಾಲೆ ಮುಖ್ಯಶಿಕ್ಷಕ ರೆಹಮತ್ಉಲ್ಲಾ ಖಾನ್, ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಅನಿಲಕುಮಾರ ಇತರರಿದ್ದರು.