ಶ್ರವಣಬೆಳಗೊಳ: ಜಿಲ್ಲೆಯ ಹಿರಿಯ ಪತ್ರಕರ್ತ, ಅಂಕಣಕಾರರು ಹಾಗೂ ಪತ್ರಿಕೋದ್ಯಮ, ಸಾಹಿತ್ಯ, ಸಂಸ್ಕೃತಿ, ನಾಡು-ನುಡಿಗೆ ಅಪಾರ ಸೇವೆ ಸಲ್ಲಿಸಿದ್ದ ಶ್ರವಣಬೆಳಗೊಳದ ಎಸ್.ಎನ್.ಅಶೋಕ್ ಕುಮಾರ್(80) ಶನಿವಾರ ವಯೋಸಹಜ ಅನಾರೋಗ್ಯದಿಂದ ನಿಧನರಾದರು.
ಆರೋಗ್ಯ ಸಮಸ್ಯೆ ಹಿನ್ನೆಲೆ ಹಾಸನದ ಕೆ.ಆರ್.ಪುರಂನಲ್ಲಿರುವ ರಾಜೀವ್ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿದ್ದಾರೆ. ಶ್ರೀಕ್ಷೇತ್ರ ಶ್ರವಣಬೆಳಗೊಳದ ಶ್ರೀ ದಿಗಂಬರ ಜೈನ ಮಹಾಸಂಸ್ಥಾನ ಮಠದ ಆಡಳಿತ ಮಂಡಳಿ ಸದಸ್ಯರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಅಶೋಕ್ ಕುಮಾರ್ ಅವರು, ಮಠದಿಂದ ಪ್ರಕಟಗೊಳ್ಳುತ್ತಿದ್ದ ಗೊಮ್ಮಟವಾಣಿ ಪಾಕ್ಷಿಕ ಪತ್ರಿಕೆಯ ಸಂಪಾದಕರಾಗಿ ಸುಮಾರು 40 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು.
ಚನ್ನರಾಯಪಟ್ಟಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಕಾರ್ಯಕಾರಿ ಸಮಿತಿ ಮತ್ತು ರಾಷ್ಟ್ರೀಯ ಮಂಡಳಿ ಸದಸ್ಯರಾಗಿಯೂ ಆಗಿ ಸೇವೆ ಸಲ್ಲಿಸಿದ್ದರು. ಹಾಸನದ ಖ್ಯಾತ ಆಯುರ್ವೇದ ವೈದ್ಯ ಡಾ.ಎಸ್.ಎ.ನಿತಿನ್ ಹಾಗೂ ಸಚಿನ್ ಸೇರಿದಂತೆ ಮೂವರು ಪುತ್ರರು ಇದ್ದಾರೆ. ಶ್ರವಣಬೆಳಗೊಳದಲ್ಲಿ ಅಂತ್ಯಕ್ರಿಯೆ ನೆರವೇರಿತು. ಇದಕ್ಕೂ ಮುನ್ನ ರಾಜೀವ್ ಆಸ್ಪತ್ರೆ, ಚನ್ನರಾಯಪಟ್ಟಪತ್ರಕರ್ತರ ಭವನದ ಆವರಣ ಹಾಗೂ ಶ್ರವಣಬೆಬೆಳಗೊಳದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು.
ಚಾರುಶ್ರೀ ಸಂತಾಪ: ಎಸ್.ಎನ್.ಅಶೋಕ್ ಕುಮಾರ್ ಅವರ ನಿಧನಕ್ಕೆ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಶ್ರೀಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಅಪೇಕ್ಷೆಯಿಂದ ಅಶೋಕ್ ಅವರು ಸರ್ಕಾರಿ ಕೆಲಸಕ್ಕೆ ಸ್ವಯಂ ನಿವೃತ್ತಿ ಘೋಷಿಸಿ ತಮ್ಮನ್ನು ಧಾರ್ಮಿಕ ಹಾಗೂ ಸಾಮಾಜಿಕ ಸೇವೆಗೆ ತೊಡಗಿಸಿಕೊಂಡಿದ್ದರು. ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಧಾರ್ಮಿಕ ಸೇವೆಗೆ ಅಪಾರ ಒತ್ತು ನೀಡಿದ್ದರು, ಶ್ರೀಯುತರ ಅಗಲಿಕೆಯಿಂದ ಸಮಾಜಕ್ಕೆ ಅಪಾರ ನಷ್ಟ ಉಂಟಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲೆಂದು ಪ್ರಾರ್ಥಿಸುತ್ತೇವೆ ಎಂದು ತಿಳಿಸಿದ್ದಾರೆ.
ಕೆಯುಡಬ್ಲ್ಯೂಜೆ ಸಂತಾಪ : ಅಶೋಕ್ಕುಮಾರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಚ್.ಬಿ.ಮದನಗೌಡ ಹಾಗೂ ಇತರರು ಸಂತಾಪ ಸೂಚಿಸಿದ್ದಾರೆ.