ಪಿರಿಯಾಪಟ್ಟಣ: ತಾಲೂಕಿನ ನೆರಳೇಕುಪ್ಪೆ ಗ್ರಾಮದಲ್ಲಿ ಸಚಿವ ಕೆ.ವೆಂಕಟೇಶ್ ಅವರ ಕಾರ್ಯಕ್ರಮಕ್ಕೆ ಹಾಕಲಾಗಿದ್ದ ಶಾಮಿಯಾನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಸೋಮವಾರ ಜನಸಂಪರ್ಕ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಸಲು ಶಾಮಿಯಾನ ಹಾಕಿಲಾಗಿತ್ತು. ಭಾನುವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಶಾಮಿಯಾನ ಸಂಪೂರ್ಣ ಸುಟ್ಟು ಹೋಗಿದೆ. ಕಾರ್ಯಕ್ರಮ ಆಯೋಜನೆ ಜವಾಬ್ದಾರಿ ಹೊತ್ತಿದ್ದ ಕೋಮಲಾಪುರ ಗ್ರಾಮ ಪಂಚಾಯಿತಿಯ ಪಿಡಿಒ ಅವಿನಾಶ್, ಅಪರಿಚಿತ ಕಿಡಿಗೇಡಿಗಳ ವಿರುದ್ಧ ದೂರು ನೀಡಿದ್ದು, ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃತ್ಯ ನಡೆದ ಸ್ಥಳಕ್ಕೆ ಇನ್ಸ್ಪೆಕ್ಟರ್ ದೀಪಕ್ ಮತ್ತು ಸಬ್ ಇನ್ಸ್ಪೆಕ್ಟರ್ ಅಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಸುಳಿವು ದೊರೆತಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಇನ್ಸ್ಪೆಕ್ಟರ್ ದೀಪಕ್ ತಿಳಿಸಿದ್ದಾರೆ.