ಹಿರೀಸಾವೆ: ಹೋಬಳಿಯ ಹೊನ್ನಮಾರನಹಳ್ಳಿ ಗ್ರಾಮದ ಶ್ರೀ ಶನೈಶ್ಚರಸ್ವಾಮಿ ದೇಗುಲದ ವಾರ್ಷಿಕೋತ್ಸವ ಹಾಗೂ ಶ್ರೀ ನಿಂಗಪ್ಪಸ್ವಾಮೀಜಿಯ ಪುಣ್ಯಸ್ಮರಣೆ ಪ್ರಯುಕ್ತ ಸೋಮವಾರ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ಬೆಳಗ್ಗೆ ಮುಂಜಾನೆ ದೇಗುಲಕ್ಕೆ ಹಸಿರು ಚಪ್ಪರ ಹಾಕಿ, ಬಾಳೆ ಕಂದು ಕಟ್ಟಿ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಭಕ್ತರ ಸಮ್ಮುಖದಲ್ಲಿ ದೇವರಿಗೆ ಕ್ಷೀರಾಭಿಷೇಕ, ಗಂಗಾಪೂಜೆ, ನಾಗದೇವತಾ ಹಾಗೂ ನವಗ್ರಹ ಪೂಜೆ ಮತ್ತು ವಿವಿಧ ಹೋಮಗಳು ನಡೆದವು. ಶನೈಶ್ಚರಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಕುಮಾರಸ್ವಾಮಿ ಅವರು ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.
ಭಕ್ತರ ಸಹಕಾರದಿಂದ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಹಾಸನ, ಮಂಡ್ಯ, ತುಮಕೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಭಕ್ತರು, ಹಲವು ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.