ಬೆಂಗಳೂರು: ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಅ. 25ರಂದು ವಿಜಯದಶಮಿ ಆಯುಧಪೂಜೆ ಹಬ್ಬದ ದಿನದಂದೇ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಹೊಸಕೋಟೆ ಭಾಗದ ಪಕ್ಷದ ಮುಖಂಡರ ಸಭೆ ಕರೆದು ಅಭಿಪ್ರಾಯ ಕೇಳಿದ್ದು, ಅವರ ಸೇರ್ಪಡೆ ಬಗ್ಗೆ ಯಾವುದೇ ಆಕ್ಷೇಪಣೆ ಬಂದಿಲ್ಲ. ಹೀಗಾಗಿ ಈ ಮಾಸದ ಕೊನೆಯ ವಾರದಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಅದೇ ರೀತಿ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಸೋಮಣ್ಣ ಬೇವಿನ ಮರದ ಕೂಡ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆಂದು ತಿಳಿದುಬಂದಿದೆ. ಸೋಮಣ್ಣ ಬೇವಿನ ಮರದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು. ಶಿಗ್ಗಾವ್ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಅವರು ಮುಂಬರುವ ಚುನಾವಣೆ ಉದ್ದೇಶದಿಂದ ಕಾಂಗ್ರೆಸ್ಗೆ ಜಿಗಿಯುವ ಉದ್ದೇಶದಿಂದ ಕೈ ನಾಯಕರ ಸಂಪರ್ಕ ಸಾಧಿಸಿದ್ದಾರೆನ್ನಲಾಗಿದೆ. ಮಂಗಳವಾರ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಅವರೊಂದಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.