ಶಿವಮೊಗ್ಗ: ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಜಾರಿಗೊಳಿಸಿರುವ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಡಿಸಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಿಸಿ ಕಚೇರಿಯಲ್ಲಿ ಗುರುವಾರ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿಗೊಳಿಸುತ್ತಿರುವ ಯೋಜನೆಗಳ ಮಾಹಿತಿಯನ್ನು ಪ್ರಚಾರಪಡಿಸಬೇಕು ಎಂದರು.
ಕೊಳಚೆ ನಿರ್ಮೂಲನೆ ಮಂಡಳಿಯ ಮೂಲಕ ಅನುಷ್ಠಾನಗೊಳಿಸುತ್ತಿರುವ ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಬ್ಯಾಂಕ್ ಮತ್ತು ಮಂಡಳಿಯಿಂದ ಹಣಕಾಸು ನೆರವು ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಧರ್ಮಪ್ಪ ಮಾತನಾಡಿ, ಅಲ್ಪಸಂಖ್ಯಾತರಿಗೆ ಉದ್ಯೋಗವಕಾಶ ಕಲ್ಪಿಸಲು ಪೂರಕವಾಗಿ ಕೌಶಲ್ಯಾಭಿವೃದ್ಧಿ ತರಬೇತಿ, ವಸತಿ ಯೋಜನೆ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನೆ ಒಳಗೊಂಡಂತೆ ವಿವಿಧ ಇಲಾಖೆಗಳ ಸೌಲಭ್ಯಗಳು, ಕೈಗಾರಿಕೆ, ಬ್ಯಾಂಕ್ಗಳ ಮೂಲಕ ಹಣಕಾಸು ನೆರವು, ಎನ್ಯುಎಲ್ಎಂ(ರಾಷ್ಟ್ರೀಯ ನಗರ ಜೀವನೋಪಾಯ ಮಿಷನ್), ಎನ್ಆರ್ಎಲ್ಎಂ(ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್) ಸೇರಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ 2,70,939 ಅಲ್ಪಸಂಖ್ಯಾತರಿದ್ದು, ಅವರಲ್ಲಿ 2,34,664 ಮುಸ್ಲಿಮರು, 26,531 ಕ್ರಿಶ್ಚಿಯನ್ನರು, 9,234 ಜೈನರು, 400 ಸಿಖ್ರು ಮತ್ತು 120 ಬೌದ್ಧ ಧರ್ಮೀಯರು ಇದ್ದಾರೆ. ಎಪ್ರಿಲ್ನಿಂದ ಜೂನ್ ಅವಧಿಯಲ್ಲಿ 2,298 ಬಾಣಂತಿಯರಿಗೆ ಹಾಗೂ 2,653 ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡಲಾಗಿದೆ. ಶಾಲೆಯಿಂದ ಹೊರಗುಳಿದಿರುವ 9 ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು. ಎಎಸ್ಪಿ ಡಾ. ಎಚ್.ಟಿ.ಶೇಖರ್ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.