ಶಿವಮೊಗ್ಗ: ಪ್ರಸಕ್ತ ವಿಧಾನಸಭಾ ಚುನಾವಣೆ ಪ್ರಣಾಳಿಕೆಯನ್ನು ಜಿಲ್ಲಾಮಟ್ಟದಲ್ಲೂ ಸಿದ್ಧಪಡಿಸಲಾಗುವುದು ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಪ್ರಚಾರ ಸಮಿತಿ ಉಪಾಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು.
15 ದಿನಗಳ ಹಿಂದೆ ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ನನ್ನನ್ನು ಪಕ್ಷದ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷನಾಗಿ ನೇಮಕ ಮಾಡಲಾಗಿದೆ. ರಾಜ್ಯದ ಪ್ರಣಾಳಿಕೆ ಜತೆಗೆ ಜಿಲ್ಲಾವಾರು ಪ್ರಣಾಳಿಕೆ ಪ್ರತ್ಯೇಕವಾಗಿ ರಚಿಸಲು ತೀರ್ಮಾನಿಸಲಾಗಿದೆ. ಈಗಾಗಲೇ ಚಿಂತನ ಮಂಥನ ಸಭೆಯಲ್ಲಿ ಸಲಹೆ, ಅಭಿಪ್ರಾಯ ಪಡೆಯಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಳೆದ ಬಾರಿ ಪ್ರಣಾಳಿಕೆಯಲ್ಲಿ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಶೇ.96-97ರಷ್ಟು ಭರವಸೆಗಳನ್ನು ಈಡೇರಿಸಿದೆ. ಈ ಬಾರಿಯೂ ಅವುಗಳನ್ನೂ ಮುಂದುವರಿಸಲಾಗುವುದು. ಪ್ರದೇಶವಾರು ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದೆ. ಯುದ್ಧಕ್ಕೆ ಹೊರಟಾಗ ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಮುಂದಿನ ವಿಧಾನಸಭೆಗೆ ಈಗಲೇ ತಯಾರಿ ನಡೆಸಲು ಅನುಕೂಲವಾಗಿದೆ ಎಂದು ಹೇಳಿದರು.