ಶಿವಮೊಗ್ಗ: ಕಳೆದ ಐದಾರು ತಿಂಗಳಿಂದ ‘ಜನಪರ ಜೀವಪರ’ ಧ್ಯೇಯದೊಂದಿಗೆ ಹತ್ತಾರು ಸಾಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಜಿಲ್ಲಾದ್ಯಂತ ಸಂಚಲನ ಮೂಡಿಸಿದ್ದ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ, ಸರ್ಜಿ ಫೌಂಡೇಷನ್ ವ್ಯವಸ್ಥಾಪಕ ಟ್ರಸ್ಟಿ ಡಾ. ಧನಂಜಯ ಸರ್ಜಿ ಕಮಲ ಮುಡಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಶಾಸಕ ಕೆ.ಎಸ್.ಈಶ್ವರಪ್ಪ ಮತ್ತು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಸರ್ಜಿ ಅವರ ತಂದೆ ರುದ್ರಪ್ಪ ಸರ್ಜಿ ಮತ್ತು ಪತ್ನಿ ನಮಿತಾ ಸರ್ಜಿ ಕೂಡ ಸಾಕ್ಷಿಯಾದರು.
ಶಾಸಕ ಕೆ.ಬಿ.ಅಶೋಕ್ ನಾಯ್ಕ, ಎಂಎಲ್ಸಿಗಳಾದ ಆಯನೂರು ಮಂಜುನಾಥ, ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಮಾಜಿ ಎಂಎಲ್ಸಿ ಆರ್.ಕೆ.ಸಿದ್ದರಾಮಣ್ಣ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಎಸ್.ಎನ್.ಚನ್ನಬಸಪ್ಪ, ನಗರ ಅಧ್ಯಕ್ಷ ಎನ್.ಕೆ.ಜಗದೀಶ್ ಉಪಸ್ಥಿತರಿದ್ದರು.