ಶಿವಮೊಗ್ಗ: ಕೆಳದಿ ಶಿವಪ್ಪನಾಯಕ ಕೃಷಿ ಹಾಗೂ ತೋಟಗಾರಿಕೆ ವಿವಿಯ 7ನೇ ಘಟಿಕೋತ್ಸವ ಸೆ.28ರ ಮಧ್ಯಾಹ್ನ 3ಕ್ಕೆ ಇರುವಕ್ಕಿ ಕ್ಯಾಂಪಸ್ನಲ್ಲಿ ಜರುಗಲಿದೆ. ವಿವಿಯ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಹ ಕುಲಾಧಿಪತಿ, ಕೃಷಿ ಸಚಿವ ಬಿ.ಸಿ.ಪಾಟೀಲ್ ಉಪಸ್ಥಿತರಿರಲಿದ್ದಾರೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್ನ ವಿಶ್ರಾಂತ ಮಹಾನಿರ್ದೇಶಕ ಡಾ.ಆರ್.ಎಸ್.ಪರೋಡ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಕುಲಪತಿ ಡಾ.ಆರ್.ಸಿ.ಜಗದೀಶ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿವಿಧ ವಿಷಯಗಳಲ್ಲಿ ವ್ಯಾಸಂಗ ಮಾಡಿದ 355 ಪದವೀಧರರು ಈ ಬಾರಿಯ ಘಟಿಕೋತ್ಸವದಲ್ಲಿ ಪದವಿ ಸ್ವೀಕರಿಸಲಿದ್ದಾರೆ. ಕೃಷಿ, ತೋಟಗಾರಿಕೆ ಅರಣ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ 79 ವಿದ್ಯಾರ್ಥಿಗಳಿಗೆ ಪದವಿ ಹಾಗೂ 10 ಮಂದಿಗೆ ಪಿಎಚ್ಡಿ ಪ್ರದಾನ ಮಾಡಲಾಗುತ್ತದೆ. ರ್ಯಾಂಕ್ ಗಳಿಸಿದ 24 ವಿದ್ಯಾರ್ಥಿಗಳಿಗೆ ಒಟ್ಟು 33 ಚಿನ್ನದ ಪದಕಗಳನ್ನು ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ತಿಳಿಸಿದರು.
2020-21ನೇ ಸಾಲಿನಲ್ಲಿ ನಡೆದ ಅಖಿಲ ಭಾರತ ಐಸಿಎಆರ್-ಜೆಆರ್ಎಫ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿವಿಯ 14 ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದಾರೆ. ಎನ್ಟಿಎಸ್ ಸ್ನಾತಕೋತ್ತರ ಪರೀಕ್ಷೆಗೆ 15 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ನಲ್ಲಿ ಮೂಡಿಗೆರೆ ತೋಟಗಾರಿಕೆ ಮಹಾವಿದ್ಯಾಲಯದ ವಿದ್ಯಾರ್ಥಿನಿ ಎಚ್.ಎನ್.ಸ್ವಾತಿ ಪಾಲ್ಗೊಂಡಿದ್ದರು. 12 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನಲ್ಲಿ ಆಯ್ಕೆಯಾಗಿದ್ದಾರೆ ಎಂದು ಪ್ರಗತಿಯನ್ನು ವಿವರಿಸಿದರು.
ವಿವಿಯ ಕುಲಸಚಿವ ಆರ್.ಲೋಕೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.