ಶಿವಮೊಗ್ಗ: ಕೃಷಿ ದೇಶದ ಬೆನ್ನೆಲುಬು ಮಹಿಳೆಯರೂ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆದಾಯ ಹೆಚ್ಚಿಸಿಕೊಳ್ಳಬಹುದಾಗಿದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಹಾಗೂ ತೋಟಗಾರಿಕೆ ವಿವಿಯ ವಿಸ್ತರಣಾ ನಿರ್ದೇಶಕ ಡಾ.ಬಿ.ಹೇಮ್ಲಾನಾಯ್ಕಾ ತಿಳಿಸಿದರು.
ನವುಲೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಸೋಮವಾರ ಏರ್ಪಡಿಸಿದ್ದ ಆರು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತ ಮಹಿಳೆಯರಿಗೆ ಅನುಕೂಲವಾಗಲೆಂದು ಈ ತರಬೇತಿಯನ್ನು ಆಯೋಜಿಸಲಾಗಿದೆ. ಸಮಗ್ರ ಕೃಷಿ ಪದ್ಧತಿ, ಅಂತರ ಬೆಳೆಗಳು, ಕೃಷಿಯೇತರ ಚಟುವಟಿಕೆಗಳ ಬಗ್ಗೆ ತರಬೇತಿ ನೀಡಲಾಗುವುದು ಎಂದರು.
ಉಪಕಸುಬುಗಳಾದ ಹೈನುಗಾರಿಕೆ, ಜೇನು ಸಾಕಣೆ, ಮೌಲ್ಯವರ್ಧನೆ, ಪುಷ್ಪ ಕೃಷಿ, ಅಣಬೆ ಕೃಷಿ, ಕುರಿ-ಮೇಕೆ, ಮೀನು ಸಾಕಣೆ ಕುರಿತು ಮಾಹಿತಿ ನೀಡಲಾಗುವುದು. ಸ್ವಸಹಾಯ ಸಂಘದ ಮಹಿಳೆಯರು ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧಿತ ಉತ್ಪನ್ನಗಳನ್ನು ಸಂಘದ ಹೆಸರಿನಲ್ಲಿ ಬ್ರಾೃಂಡ್ ಮಾಡಿ ಮಾರಾಟ ಮಾಡಿದರೆ ಹೆಚ್ಚಿನ ಆದಾಯ ಗಳಿಸಬಹುದೆಂದರು.
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಸಿ.ಹನುಮಂತಸ್ವಾಮಿ ಮಾತನಾಡಿ, ಶಿಬಿರದಲ್ಲಿ ಭಾಗವಹಿಸಿರುವ ರೈತ ಮಹಿಳೆಯರಿಗೆ ಅಗತ್ಯ ತರಬೇತಿ ಜತೆಗೆ ಒಂದು ದಿನದ ಶೈಕ್ಷಣಿಕ ಪ್ರವಾಸವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಸಹವಿಸ್ತರಣಾ ನಿರ್ದೇಶಕ ಡಾ.ಎಸ್.ಯು.ಪಾಟೀಲ್ ಮಾತನಾಡಿ, ಕಾಲಕ್ಕನುಸಾರವಾಗಿ, ಬೇಡಿಕೆಗೆ ಅನುಗುಣವಾಗಿ ಬೆಳೆಗಳನ್ನು ಬೆಳೆಯುವುದರಿಂದ ನಿರೀಕ್ಷಿತ ಲಾಭಗಳಿಸಬಹುದು. ವೈಜ್ಞಾನಿಕವಾಗಿ ಬೆಳೆದಾಗ ಹೆಚ್ಚಿನ ಉತ್ಪಾದನೆ ನಿರೀಕ್ಷಿಸಬಹುದು ಎಂದರು.
ಕೃಷಿ ವಿಭಾಗದ ಡೀನ್ ಡಾ.ಬಿ.ಎಂ.ದುಶ್ಯಂತ್ ಕುಮಾರ್, ಗೃಹ ವಿಜ್ಞಾನ ವಿಭಾಗದ ವಿಜ್ಞಾನಿ ಡಾ.ಜ್ಯೋತಿ ಎಂ.ರಾಠೋಡ್ ಮುಂತಾದವರಿದ್ದರು.