ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆ ಮುಂದುವರಿದಿದೆ. ಫುಟ್ಪಾತ್ಗಳನ್ನು ಪದೇಪದೆ ಕಿತ್ತು ಹಾಕಲಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಸಣ್ಣ ಮಳೆಗೂ ಪ್ರವಾಹ ಉಂಟಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಮುಖರು ಶನಿವಾರ ಗೋಪಾಲಗೌಡ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಿದರು.
ನಗರದಲ್ಲಿ ಸಣ್ಣ ಮಳೆಯಾದರೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತದೆ. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದೇ ರಸ್ತೆ ಮೇಲೆ ಉಕ್ಕುವುದರಿಂದ ವಾಹನ ಸವಾರರು ಸಮಸ್ಯೆ ಎದುರಿಸುವಂತಾಗಿದೆ. ಪೂರ್ಣಗೊಂಡ ಫುಟ್ಪಾತ್ ಕಾಮಗಾರಿಗಳನ್ನೂ ಕಿತ್ತು ಹಾಕಲಾಗುತ್ತಿದೆ ಎಂದು ದೂರಿದರು.
ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರು ಯಾರು? ಎಂಬುದೇ ತಿಳಿಯುವುದಿಲ್ಲ. ಅಧಿಕಾರಿಗಳೂ ಕಾಮಗಾರಿಯ ಪರಿಶೀಲನೆ ನಡೆಸುತ್ತಿಲ್ಲ. ಜನಪ್ರತಿನಿಧಿಗಳಿಗೂ ದೂರು ನೀಡಿದರೂ, ಹಲವಾರು ಬಾರಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಇನ್ನು ಮುಂದಾದರೂ ಜಿಲ್ಲಾಡಳಿತ ಎಚ್ಚೆತ್ತು ಸಮರ್ಪಕ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ. ವಸಂತಕುಮಾರ್, ಸಂಘಟನಾ ಕಾರ್ಯದರ್ಶಿ ಡಾ.ಎ.ಸತೀಶ್ ಕುಮಾರ್ ಶೆಟ್ಟಿ, ಪ್ರಮುಖರಾದ ಎಸ್.ಬಿ.ಅಶೋಕ್ ಕುಮಾರ್, ಜಿ.ಡಿ. ಮಂಜುನಾಥ್, ಸೀತಾರಾಮು, ಡಾ.ಶ್ರೀಪತಿ, ಚನ್ನವೀರಪ್ಪ ಗಾಮನಗಟ್ಟಿ ಮುಂತಾದವರು ಪ್ರತಿಭಟನೆಯಲ್ಲಿದ್ದರು.