ತುಮಕೂರು: ಟಿಕೆಟ್ ಕೈ ತಪ್ಪಲಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಅ.9ರಂದು ಬಿ.ಫಾರಂ ಇಲ್ಲದೆ ಟಿಕೆಟ್ ಘೋಷಣೆಗೂ ಮೊದಲೇ ತರಾತುರಿಯಲ್ಲಿ ನಾಮಪತ್ರ ಸಲ್ಲಿಸಿದ್ದ ಟಿ.ಬಿ.ಜಯಚಂದ್ರ, ಗುರುವಾರ ಅಪಾರ ಜನರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸುವ ಮೂಲಕ, ಶಕ್ತಿ ಪ್ರದರ್ಶನ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಯಚಂದ್ರ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಿದ ವೇಳೆ ನಗರದಲ್ಲಿ ರೋಡ್ ಶೋ ನಡೆಸಲಾಯಿತು. ಶಿರಾ ಬೈಎಲೆಕ್ಷನ್ನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದೆ.
ಚುನಾವಣಾ ಉಸ್ತುವಾರಿ ಹೊತ್ತಿರುವ ಡಾ.ಜಿ.ಪರಮೇಶ್ವರ್, ಉಪಉಸ್ತುವಾರಿ ಕೆ.ಎನ್.ರಾಜಣ್ಣ, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಎಸ್.ಪಿ.ಮುದ್ದಹನುಮೇಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ಸಾಸಲು ಸತೀಶ್ ಸೇರಿದಂತೆ ಜಿಲ್ಲೆಯ ಹಾಲಿ, ಮಾಜಿ ಶಾಕಸರು ಹಾಜರಿದ್ದರು.
ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅ.16 ನಾಮಪತ್ರ ಸಲ್ಲಿಸಲು ಕೊನೇ ದಿನ. ಬುಧವಾರ ಒಳ್ಳೆಯ ದಿನ ಎಂಬ ಲೆಕ್ಕಾಚಾರದಲ್ಲಿ ರೇವಣ್ಣ ಸೂಚಿಸಿದ ಮಹೂರ್ತದಲ್ಲೇ ಜೆಡಿಎಸ್ ಅಭ್ಯರ್ಥಿ ಪರ ಸೂಚಕರು ಬೃಹತ್ ಕಾರ್ಯಕರ್ತರ ರ್ಯಾಲಿ ಮೂಲಕ ನಾಮಪತ್ರ ಸಲ್ಲಿಸಿದ್ದರು. ಇದಾದ ಬಳಿಕ ಕಾಂಗ್ರೆಸ್ ತನ್ನ ಬಲ ಪ್ರದರ್ಶಿಸಿದೆ. ಅ.16 ನಾಮಪತ್ರ ಸಲ್ಲಿಕೆಗೆ ಕೊನೇ ದಿನ.