ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರವನ್ನು ಶತಾಯಗತಾಯ ಗೆಲ್ಲಲೇ ಬೇಕೆಂದು ಪಣತೊಟ್ಟಿರುವ ಜೆಡಿಎಸ್, ದಿ. ಮಾಜಿ ಶಾಸಕ ಸತ್ಯನಾರಾಯಣ ಅವರ ಪತ್ನಿಯನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.
ಸತ್ಯಣ್ಣ ಅವರ ಅಕಾಲಿಕ ನಿಧನದಿಂದಾಗಿ ತೆರವಾದ ಶಿರಾ ಎಂಎಲ್ಎ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಮೂರು ಪಕ್ಷಗಳೂ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿವೆ. ಅನುಕಂಪದ ಅಸ್ತ್ರ ಪ್ರಯೋಗಿಸಿರುವ ಜೆಡಿಎಸ್, ಅಮ್ಮಾಜಮ್ಮಗೆ ಟಿಕೆಟ್ ಕೊಟ್ಟಿದೆ. ಅಮ್ಮಾಜಮ್ಮರ ಅನುಪಸ್ಥಿತಿಯಲ್ಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಸೂಚಿಸಿದ ಮಹೂರ್ತದಲ್ಲೇ ಜೆಡಿಎಸ್ ಅಭ್ಯರ್ಥಿ ಪರ ಪಕ್ಷದ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ.
ಅಮ್ಮಾಜಮ್ಮ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅ.16 ನಾಮಪತ್ರ ಸಲ್ಲಿಸಲು ಕೊನೇ ದಿನ. ಬುಧವಾರ ಒಳ್ಳೆಯ ದಿನ ಎಂಬ ಲೆಕ್ಕಾಚಾರದಲ್ಲಿ ರೇವಣ್ಣ ಸೂಚಿಸಿದ ಮಹೂರ್ತದಲ್ಲೇ ಜೆಡಿಎಸ್ ಅಭ್ಯರ್ಥಿ ಪರ ಸೂಚಕರು ನಾಮಪತ್ರ ಸಲ್ಲಿಸಿದರು.
ಮಾಜಿ ಸಚಿವ ಎಚ್.ಡಿ.ರೇವಣ್ಣ, ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ನೇತೃತ್ವದ ತಂಡ ಚುನಾವಣಾಧಿಕಾರಿ ಡಾ. ನಂದಿನಿ ದೇವಿಗೆ ನಾಮಪತ್ರ ಸಲ್ಲಿಸಿತು.
ಈಗಾಗಲೇ ನಾಮಪತ್ರ ಸಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ, ಗುರುವಾರ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
12 ಕೋಟಿ ಸಂಪತ್ತಿನ ಒಡತಿ ಕುಸುಮಾ, ಅಫಿಡವಿಟ್ನಲ್ಲಿ ಪತಿಯ ಹೆಸರನ್ನು ಪ್ರಸ್ತಾಪಿಸಿಯೇ ಇಲ್ಲ!