ಶಿವಮೊಗ್ಗ: ಇನ್ಮುಂದೆ ಎಲ್ಲ ಸರ್ಕಾರಿ ಕಚೇರಿಗಳ ಜತೆಗೆ ಖಾಸಗಿ ಸಂಸ್ಥೆಗಳಲ್ಲೂ ಮಹಿಳೆಯರು ದೂರು ದಾಖಲಿಸಲು ಅನುಕೂಲವಾಗುವಂತೆ ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು. ಈ ಕುರಿತು ಅಧಿಕಾರಿಗಳು ಪರಿಶೀಲಿಸಿ ಖಾತ್ರಿ ಪಡಿಸಬೇಕು ಎಂದು ರಾಷ್ಟೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ಸೂಚನೆ ನೀಡಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ಚರ್ಚೆ ಮತ್ತು ಸಮಾಲೋಚನೆ ನಡೆಸಿದ ಅವರು, ಎಲ್ಲ ಮಹಿಳಾ ಕಾರ್ಮಿಕರನ್ನು ಕಾರ್ಮಿಕ ಕಾಯ್ದೆಯಡಿ ನೋಂದಣಿ ಮಾಡಿಸಿ ಸೌಲಭ್ಯಗಳನ್ನು ಒದಗಿಸಬೇಕು. ಮಹಿಳಾ ವಲಸೆ ಕಾರ್ಮಿಕರಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಸಖಿ ಒನ್ ಸ್ಟಾಪ್ ಸೆಂಟರ್ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಸ್ವಂತ ಸುಸಜ್ಜಿತ ಕಟ್ಟಡ ಆದಷ್ಟು ಬೇಗ ಪೂರ್ಣಗೊಳಿಸಬೇಕು. ಸಖಿ ಕೇಂದ್ರದಲ್ಲಿ ನೊಂದ ಮಹಿಳೆಯರಿಗೆ ವೈದ್ಯಕೀಯ, ಆಪ್ತ ಸಮಾಲೋಚನೆ, ಕಾನೂನು ನೆರವು ಒಂದೇ ಸೂರಿನಡಿ ಒದಗಿಸಲಾಗುತ್ತದೆ. ಈ ಕುರಿತು ಹೆಚ್ಚಿನ ಅರಿವು ಮೂಡಿಸುವ ಕಾರ್ಯ ಗ್ರಾಮೀಣ ಮಟ್ಟದಲ್ಲೂ ನಡೆಯಬೇಕು ಎಂದರು.
ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸುವುದಕ್ಕಿಂತ ಆಪ್ತ ಸಮಾಲೋಚನೆ, ಪರಸ್ಪರ ಮಾತುಕತೆಗೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಕಳೆದ ಒಂದು ವರ್ಷ ಅವಧಿಯಲ್ಲಿ 109 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು ಇವುಗಳ ಪೈಕಿ 89 ವಿವಾಹ ತಡೆಯಲಾಗಿದೆ. ಬಾಲ್ಯ ವಿವಾಹ ತಡೆಗೆ ಇನ್ನಷ್ಟು ಪರಿಣಾಮಕಾರಿ ಕ್ರಮಗಳು ಅಗತ್ಯವಾಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕೆ.ಬಿ.ಶಿವಕುಮಾರ್, ಎಸ್ಪಿ ಕೆ.ಎಂ.ಶಾಂತರಾಜು, ಎಎಸ್ಪಿ ಡಾ. ಎಚ್.ಟಿ.ಶೇಖರ್, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸುರೇಶ್ ಉಪಸ್ಥಿತರಿದ್ದರು.