ಮುಂಬೈ: ಸ್ಟಾರ್ ಆಟಗಾರರ ಅಲಭ್ಯತೆಯಿಂದ ಕಂಗೆಟ್ಟಿರುವ ಟೀಂ ಇಂಡಿಯಾ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಸಮಬಲ ಸಾಧಿಸಿದೆ. ಸರಣಿಯ ಮೂರನೇ ಪಂದ್ಯ ಆರಂಭಕ್ಕೂ ಮುನ್ನ ಈಗ ಟೀಂ ಇಂಡಿಯಾಗೆ ಸಂಕಷ್ಟ ಒಂದು ಎದುರಾಗಿದ್ದು, ಅನಾರೋಗ್ಯದಿಂದ ಮತ್ತೊಬ್ಬ ಸ್ಟಾರ್ ಆಟಗಾರ ಸರಣಿಯ ಉಳಿದ ಪಂದ್ಯಗಳಿಂದ ಹೊರ ನಡೆದಿದ್ದಾರೆ.
ಇದೀಗ ಕೇಳಿ ಬಂದಿರುವ ಮಾಹಿತಿ ಪ್ರಕಾರ ಬೆನ್ನು ನೋವು, ತೊಡೆಸಂಧು ನೋವಿನ ಕಾರಣದಿಂದ ಶ್ರೇಯಸ್ ಅಯ್ಯರ್ ಅವರನ್ನು ಫೆಬ್ರವರಿ 15ರಿಂದ ಶುರುವಾಗಲಿರುವ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಶ್ರೇಯಸ್ ಅಯ್ಯರ್ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ 35, 13, 27 ಮತ್ತು 29 ರನ್ ಗಳಿಸಿದ್ದಾರೆ.
ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರ ಗಮನಕ್ಕೆ; ಫೆ. 11ರಂದು ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತ
ಶ್ರೇಯಸ್ ಅಯ್ಯರ್ ಗಾಯಗೊಳ್ಳುವುದರೊಂದಿಗೆ ಟೀಂ ಇಂಡಿಯಾದಲ್ಲಿ ಗಾಯಕ್ಕೆ ತುತ್ತಾದವರ ಸಂಖ್ಯೆ ಮೂರಕ್ಕೇರಿದೆ. ಅಯ್ಯರ್ಗೂ ಮೊದಲು ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದರು. ಇದೀಗ ಮೂರನೇ ಟೆಸ್ಟ್ ಆರಂಭಕ್ಕೂ ಮುನ್ನ ಈ ಇಬ್ಬರ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದ್ದು, ಇವರಿಬ್ಬರು ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಾಗಿವೆ.
ಒಂದು ವೇಳೆ ಅನಾರೋಗ್ಯದಿಂದ ಶ್ರೇಯಸ್ ಅಯ್ಯರ್ ಸರಣಿಯ ಉಳಿದ ಮೂರು ಪಂದ್ಯಗಳಲ್ಲಿ ಹೊರಗುಳಿದರೆ ಅವರ ಸ್ಥಾನಕ್ಕೆ ಯುವ ಬ್ಯಾಟ್ಸ್ಮನ್ ಸರ್ಫರಾಜ್ ಖಾನ್ರನ್ನು ಆಯ್ಕೆ ಮಾಡುವ ಸಾಧ್ಯತೆಗಳು ದಟ್ಟವಾಗಿದೆ. ಆದರೆ, ವಿರಾಟ್ ಕೊಹ್ಲಿ ತಂಡಕ್ಕೆ ವಾಪಸ್ಸಾಗಲಿದ್ದಾರಾ ಎಂಬ ಸುದ್ದಿ ಮಾತ್ರ ಇನ್ನೂ ನಿಗೂಢವಾಗಿದೆ. ಸರಣಿಯ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ಆಯ್ಕೆಗಾರರು ತಂಡವನ್ನು ಇನ್ನೂ ಪ್ರಕಟಿಸಿಲ್ಲ. ಮೂರನೇ ಟೆಸ್ಟ್ ಫೆಬ್ರುವರಿ 15ರಂದು ರಾಜಕೋಟ್ನಲ್ಲಿ ನಡೆಯಲಿದೆ. ಐದು ಪಂದ್ಯಗಳ ಸರಣಿ ಈಗ 1–1ರಲ್ಲಿ ಸಮನಾಗಿದೆ.