ಸಿದ್ದಾಪುರ: ರಾಜ್ಯ ಸರ್ಕಾರಿ ನೌಕರರ ಸಂಘಟನೆ ವಿರುದ್ಧ್ದ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ಐದು ನೌಕರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಮಂಜುನಾಥ ಮುನ್ನೊಳಿ ಅವರ ಮೂಲಕ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರಿ ನೌಕರರ ಪರವಾಗಿ ಹಲವಾರು ಕಾರ್ಯಗಳನ್ನು ಕೈಗೊಳ್ಳುವ ಮೂಲಕ ರಾಷ್ಟ್ರದಲ್ಲಿಯೇ ಮಾದರಿ ಆಗಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘಟನೆಯನ್ನು ದುರ್ಬಲಗೊಳಿಸುವ ದುರುದ್ದೇಶದಿಂದ ಸಂಘಟನೆ ವಿರೋಧಿ ಐವರು ನೌಕರರು ಸಂಘಟನೆಯ ರಾಜ್ಯ, ಜಿಲ್ಲೆ, ತಾಲೂಕು ಘಟಕಗಳ ಅಧ್ಯಕ್ಷರ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದಾರೆ. ದೂರಿನ ಪ್ರತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಂಘಟನೆಯ ಘನತೆಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ದುರುದ್ದೇಶದಿಂದ ಕೂಡಿದ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜೇಶ ನಾಯ್ಕ, ತೇಜಸ್ವಿ ನಾಯ್ಕ, ಡಿ.ಎಂ. ನಾಯ್ಕ, ರವಿ ಗೌಡರ್, ಪರಶುರಾಮ ಕೆ. ನಾಯ್ಕ ಹಾಗೂ ಸಂಘದ ಸದಸ್ಯರಿದ್ದರು.