ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಇನ್ನೆರಡು ದಿನಗಳಲ್ಲಿ ನಮ್ಮ ತಂದೆ ನಿರ್ಧಾರ ತಿಳಿಸಲಿದ್ದಾರೆ. ಹೈಕಮಾಂಡ್ ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ನಾನು ಎರಡು ಬಾರಿ ಆಂತರಿಕ ಸರ್ವೇ ಮಾಡಿದ್ದು, ಅವರ ಪರವಾಗಿಯೇ ಫಲಿತಾಂಶ ಬಂದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರ ಬಿಟ್ಟು, ಈ ಬಾರಿ ಕೋಲಾರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಆದರೆ ಚುನಾವಣೆಯ ಸಮಯ ಹತ್ತಿರವಾಗುತ್ತಿದ್ದಂತೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಮನಸ್ಸು ಮಾಡಿದ್ದಾರೆ. ಶುಕ್ರವಾರ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರ ಒಂದೇ ಹೆಸರನ್ನು ಪ್ರಸ್ತಾವಿಸಿ, ಅಂತಿಮಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ, ಕೋಲಾರ ಹೆಸರು ಬಂದ ಕೂಡಲೇ ಸಿದ್ದರಾಮಯ್ಯ, ಕೋಲಾರ ಸ್ಫರ್ಧೆ ಬಗ್ಗೆ ಈಗ ಚರ್ಚೆ ಬೇಡ, ನಂತರ ಮಾಡೋಣ ಎಂದು ಹೇಳಿ ಅಚ್ಚರಿ ಮೂಡಿಸಿದ್ದರು.
ಇದನ್ನೂ ಓದಿ: ಬಿಜೆಪಿಯಲ್ಲಿ ಬೆಳಗಿದ ಪೂರ್ಣಿಮಾ ಕಾಂಗ್ರೆಸ್ನತ್ತ ಪಯಣ? ಕಮಲ ಬಿಟ್ಟು ಕೈ ಹಿಡಿಯಲು ಶಾಸಕಿ ಸಜ್ಜು!
ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡುತ್ತಾ, ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದನ್ನು ಬಹುತೇಕ ಖಚಿತ ಪಡಿಸಿದ್ದಾರೆ. ಹೈಕಮಾಂಡ್ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡದಂತೆ ಸಲಹೆ ನೀಡಿದ್ದು, ಅವರ ಮಾತು ಕೇಳಬೇಕಾಗುತ್ತದೆ ಎಂದಿದ್ದಾರೆ. ಆದರೆ ಸಿದ್ದರಾಮಯ್ಯ ಅವರಿಗೆ ಕೋಲಾರದಲ್ಲಿ ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲ. ಇದರ ಬಗ್ಗೆ ತಂದೆ ಅವರೇ ಸ್ಪಷ್ಟನೆ ನೀಡಬೇಕು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ಅವರಿಗೆ ಬಹು ಕ್ಷೇತ್ರ ಆಯ್ಕೆಗೆ ಅವಕಾಶ ಇರುವುದೇ ತೊಂದರೆ ಆಗಿರೋದು. ಒಂದು ವೇಳೆ ಸಿದ್ದರಾಮಯ್ಯ ವರುಣ ಕ್ಷೇತ್ರಕ್ಕೆ ಬಂದರೆ ನಾನು ಬಿಟ್ಟು ಕೊಡುವೆ. ನಾನು ಬೇರೆ ಯಾವುದೇ ಕ್ಷೇತ್ರದಲ್ಲೂ ಸ್ಪರ್ಧೆ ಮಾಡಲ್ಲ. ಬೇರೆ ಕ್ಷೇತ್ರವಾದರೂ ಅಲ್ಲಿನ ಸ್ಥಳೀಯ ಅಭ್ಯರ್ಥಿಗಳೇ ಕೆಲಸ ಮಾಡುತ್ತಾರೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.