ಬೆಂಗಳೂರು: ಕೇಂದ್ರ ಮೀಸಲು ಪಡೆ(CRPF)ಗೆ ನಡೆಸುವ ಪ್ರವೇಶಾತಿ ಪರೀಕ್ಷೆಯಲ್ಲಿ ಹಿಂದಿಯೇತರ ರಾಜ್ಯಗಳಲ್ಲಿರುವ ಅಭ್ಯರ್ಥಿಗಳಿಗೆ ಮಾತೃ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಆಗ್ರಹಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಸಿದ್ದರಾಮಯ್ಯ ಭಾಷಾ ತಾರತಮ್ಯವನ್ನು ಖಂಡಿಸಿದ್ದಾರೆ ಮತ್ತು ನಿಯಮಗಳನ್ನು ಸಡಿಲಿಸುವಂತೆ ಆಗ್ರಹಿಸಿದ್ದಾರೆ.
ಸರಣಿ ಟ್ವೀಟ್ ಮೂಲಕ ಮನವಿ
ಈ ಕುರಿತು #ಭಾಷಾತಾರತಮ್ಯ ಹ್ಯಾಶ್ ಟ್ಯಾಗ್ನಡಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಭಾಷೆ ಜ್ಞಾನವನ್ನು ಪ್ರತಿಬಿಂಬಿಸುವುದಿಲ್ಲ, ಅದು ಸಂವಹನದ ಮಾಧ್ಯಮವಾಗಿದೆ. ಕನ್ನಡ ಮಾಧ್ಯಮದಲ್ಲಿ ಓದಿದ ಅಭ್ಯರ್ಥಿಗಳು ಭಾಷೆಯ ಸಮಸ್ಯೆಯಿಂದಾಗಿ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ. ಇದು ನಮ್ಮ ಯುವಕರಿಗೆ ಅನ್ಯಾಯವಾಗಿದೆ.
ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೋ ಓದಿ: CRPF ನೇಮಕಾತಿ ಪರೀಕ್ಷೆ; ಪ್ರಾದೇಶಿಕ ಭಾಷೆಗಳಿಗೆ ಅವಕಾಶ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಸ್ಟಾಲಿನ್
ಹಿಂದಿ ಹೇರುವ ಯತ್ನ
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಡಬಲ್ ಇಂಜಿನ್ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ.
ಕೇಂದ್ರ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಕಿಡಿಕಾರಿದ್ದಾರೆ.
ನಿಯಮ ಸಡಿಲಿಸಿ
ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.