ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 2021ರ ಡಿಸೆಂಬರ್ನಲ್ಲಿ ನಡೆದ 17 ಸಹಾಯಕ ಪ್ರಾಧ್ಯಾಪಕರು ಮತ್ತು 8 ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದ್ದು, ಪ್ರತಿ ಹುದ್ದೆಗೂ 50 ಲಕ್ಷ ರೂ. ಲಂಚ ಪಡೆಯಲಾಗಿದೆ ಎಂದು ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಹೊಸ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘಿಸಲಾಗಿದೆ. ಕಾಟಾಚಾರಕ್ಕೆ ನೇರ ಸಂದರ್ಶನ ನಡೆಸಲಾಗಿದ್ದು, ಸರ್ಕಾರ ತಕ್ಷಣ ನೇಮಕಾತಿ ಪ್ರಕ್ರಿಯೆ ತಡೆಹಿಡಿಯಬೇಕು. ಇಲ್ಲವಾದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ನೇರ ಸಂದರ್ಶನ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ನೇಮಕಾತಿಯಲ್ಲಿ ಹಗರಣ ನಡೆದಿದ್ದು ಸರ್ಕಾರ ತನಿಖೆ ಮಾಡಬೇಕು. ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಿ ಮರು ನೇಮಕಾತಿ ಮಾಡಬೇಕು. ರದ್ದುಪಡಿಸದಿದ್ದರೆ ನೇಮಕಾತಿಯನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದರು.
ಮುಖಂಡರಾದ ಲಕ್ಷ್ಮಣ್, ದೀಪಕ್ಸಿಂಗ್, ಶ್ಯಾಮ್ಸುಂದರ್, ಮಂಜುನಾಯ್ಕ, ಮಂಜುನಾಥ ಬಾಬು, ಪ್ರಸನ್ನ, ಸುವರ್ಣಾ ನಾಗರಾಜ್, ರಘು, ಅಕ್ರಮ್ ಸುದ್ದಿಗೋಷ್ಠಿಯಲ್ಲಿದ್ದರು.