ಸಿಂಧನೂರು: ಕರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಏಳು ಕೋವಿಡ್ ಆಸ್ಪತ್ರೆ ಆರಂಭಿಸಲು ನಿರ್ಧರಿಸಲಾಗಿದ್ದು, ತಾಲೂಕಿಗೊಂದು ಆಸ್ಪತ್ರೆ ವ್ಯವಸ್ಥೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಶುಕ್ರವಾರ ಹೈಟೆಕ್ ಅಂಗನವಾಡಿ ಕಟ್ಟಡ ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಮಕ್ಕಳಿಗೆ 600 ಬೆಡ್ ವ್ಯವಸ್ಥೆ ಮಾಡಲಾಗಿದ್ದು, ಆರೋಗ್ಯ ಇಲಾಖೆ ಮುನ್ನಚ್ಚರಿಕೆ ಕ್ರಮಕೈಗೊಂಡಿದೆ. ವೆಂಟಿಲೇಟರ್, ಔಷಧ ಸೇರಿ ಎಲ್ಲ ಸೌಲಭ್ಯಗಳು ಆಸ್ಪತ್ರೆಗೆ ಒದಗಿಸಲಾಗುವುದು ಎಂದರು.
ರಾಜ್ಯದಲ್ಲಿ 2ನೇ ಅಲೆಯಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ 30 ಮಕ್ಕಳನ್ನು ಗುರುತಿಸಲಾಗಿದೆ. ಜವಳಗೇರಾದಲ್ಲಿ ಕೂಡ ಎರಡು ಮಕ್ಕಳಿವೆ. ಅವರ ಮುಂದಿನ ಜೀವನಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯಿಂದ 100 ಹೈಟೆಕ್ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಮಕ್ಕಳಿಗೆ ಅನುಕೂಲವಾಗುವಂತೆ ಸ್ಮಾರ್ಟ್ಕ್ಲಾಸ್, ಆಟಕ್ಕೆ ಸೌಲಭ್ಯ ಒದಗಿಸಲಾಗಿದೆ. ಜತೆಗೆ ಸೋಲಾರ್ ದೀಪದ ವ್ಯವಸ್ಥೆ ಮಾಡಲಾಗಿದೆ. ಮಕ್ಕಳನ್ನು ಆಕರ್ಷಿಸುವಂತೆ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ, ಜಿಪಂ ಮಾಜಿ ಸದಸ್ಯೆ ಗೌರಿ ಚಂದ್ರಭೂಪಾಲ ನಾಡಗೌಡ, ಪಿಎಸ್ಐ ಎರಿಯಪ್ಪ ಇತರರಿದ್ದರು.
ಭೇಟಿ: ತಾಲೂಕಿನ ಜವಳಗೇರಾದಲ್ಲಿ ಇತ್ತೀಚೆಗೆ ಕರೊನಾದಿಂದ ಮೃತಪಟ್ಟವರ ನಿವಾಸಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿ, ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಹಾಗೂ ಕುಟುಂಬಕ್ಕೆ ಸಾಂತ್ನನ ಹೇಳಿದರು.