ಕಲ್ಯಾಣ ರಥ ಬಸ್ಗಳ ಸಂಚಾರಕ್ಕೆ ಚಾಲನೆ
ಸಿಂಧನೂರು: ರಾಜ್ಯದ ಸಾರಿಗೆ ವ್ಯವಸ್ಥೆ ಅಭಿವೃದ್ಧಿಗೆ ಸರ್ಕಾರ ಬಜೆಟ್ನಲ್ಲಿ 500 ಕೋಟಿ ರೂ. ಮೀಸಲಿಟ್ಟಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಗಮ ಸಾರಿಗೆ ವ್ಯವಸ್ಥೆಗೆ 100 ಕೋಟಿ ರೂ. ಒದಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಇದನ್ನೂ ಓದಿ: ಕೆಎಸ್ಆರ್ಟಿಸಿ ಬೆಳಗಾವಿ ಘಟಕದಲ್ಲಿ ನೌಕರರ ಮೇಲೆ ಅಧಿಕಾರಿಗಳ ದೌರ್ಜನ್ಯ
ನಗರದ ಬಸ್ ನಿಲ್ದಾಣದಲ್ಲಿ ಕೆಕೆಆರ್ಟಿಸಿಯಿಂದ ಆಯೋಜಿಸಿದ್ದ ಕಲ್ಯಾಣ ರಥ ವೋಲ್ವೋ ಮಲ್ಟಿ ಆಕ್ಸಲ್ ಬಸ್ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿ ಸೋಮವಾರ ಮಾತನಾಡಿದರು.
ಕೇಂದ್ರ ಸರ್ಕಾರದ ಸಬ್ಸಿಡಿಯಲ್ಲಿ 150 ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿ ಮಾಡಲಾಗುವುದು ಎಂದರು.
ರಾಜ್ಯದ ವಿವಿಧ ಸಾರಿಗೆ ನಿಗಮಗಳಿಗೆ ನೀಡಲು 804 ಬಸ್ಗಳ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೆಕೆಆರ್ಟಿಸಿಯ ವಿವಿಧ ಬೇಡಿಕೆಗಳನ್ನು ಹಂತ-ಹಂತವಾಗಿ ಈಡೇರಿಸಲಾಗುವುದು.
ಕೆಕೆಆರ್ಟಿಸಿ ಸೇರಿ ರಾಜ್ಯದ ವಿವಿಧ ನಿಗಮಗಳಲ್ಲಿ ಖಾಲಿ ಇರುವ ಬಸ್ ಚಾಲಕ, ನಿರ್ವಾಹಕ, ಮೆಕ್ಯಾನಿಕ್ ಹಾಗೂ ಇತರ ಹುದ್ದೆಗಳ ನೇಮಕಕ್ಕೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳಿಸಲಾಗಿದೆ.
ಅನುಮೋದನೆ ಸಿಕ್ಕ ನಂತರ ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ಹಿಂದೆ ನಾನು ಸಾರಿಗೆ ಸಚಿವನಾಗಿದ್ದಾಗ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು. ಬಸ್ಗಳನ್ನೂ ಖರೀದಿ ಮಾಡಲಾಗಿತ್ತು.
ಬಿಜೆಪಿ ಆಡಳಿತದ ಸಂದರ್ಭದಲ್ಲಿ ನೇಮಕಾತಿ ಮಾಡಿರಲಿಲ್ಲ, ಬಸ್ಗಳ ಖರೀದಿಯೂ ಮಾಡಿರಲಿಲ್ಲ.
ಪ್ರಸ್ತುತ 13 ಸಾವಿರ ಹುದ್ದೆಗಳ ನೇಮಕಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 1600 ಹುದ್ದೆಗಳನ್ನು ನೇಮಕ ಮಾಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಕಲ್ಯಾಣ-ಕರ್ನಾಟಕ ಭಾಗದಲ್ಲಿ ಮೊದಲ ಬಾರಿಗೆ ಅತ್ಯಾಧುನಿಕ ಸೌಲಭ್ಯ ಹೊಂದಿರುವ ವೋಲ್ವೋ ಬಸ್ ಸಂಚಾರ ಆರಂಭಿಸಲಾಗಿದೆ. ಕಕ ಭಾಗದಲ್ಲಿ ಅತಿ ಹೆಚ್ಚು ವಾಹನಗಳ ನೋಂದಣಿಯಾಗುತ್ತಿರುವ ಸಿಂಧನೂರಿನಲ್ಲಿ ಉಪ ಸಾರಿಗೆ ಕಚೇರಿ ಆರಂಭಿಸಬೇಕು.
| ಹಂಪನಗೌಡ ಬಾದರ್ಲಿ ಶಾಸಕ ಸಿಂಧನೂರು