ಸಿರಗುಪ್ಪ: ನಗರದ ತಾಲೂಕು ಆಸ್ಪತ್ರೆಯಲ್ಲಿ ಮಕ್ಕಳ ತಜ್ಞ ವೈದ್ಯರನ್ನು ನೇಮಿಸಬೇಕೆಂದು ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಶನಿವಾರ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ದೇವರಾಜ್ಗೆ ಮನವಿ ಸಲ್ಲಿಸಿದರು.
ಮುಖಂಡ ಎ.ಎಂ.ಶೇಖರಪ್ಪ ಮಾತನಾಡಿ, ತಾಲೂಕು ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಿಲ್ಲ. ನಗರ ಸೇರಿದಂತೆ ತಾಲೂಕಿನಲ್ಲಿ ಡೆಂೆ, ಮಲೇರಿಯಾ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳು ಮಕ್ಕಳಲ್ಲಿ ಕಾಣಿಸಿಕೊಂಡಿದ್ದು, ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಆದರೆ, ತಜ್ಞ ವೈದ್ಯರಿಲ್ಲದ ಕಾರಣ ಸೂಕ್ತ ಚಿಕಿತ್ಸೆ ದೊರೆಯದೆ ಖಾಸಗಿ ಆಸ್ಪತ್ರೆಗಳಿಗೆ ಮೊರೆ ಹೋಗುವಂತಾಗಿದೆ. ಇಲ್ಲವೆ ವಿಮ್ಸ್ಗೆ ಶಿಫಾರಸು ಮಾಡಲಾಗುತ್ತಿದೆ. ಬಡವರು ಹಣ ಹೊಂದಿಸಲು ಪರದಾಡುವಂತಾಗಿದೆ. ಆದ್ದರಿಂದ ತಕ್ಷಣ ಅಗತ್ಯ ತಜ್ಞ ವೈದ್ಯರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು. ಮುಖಂಡರಾದ ಮಾರೇಶ, ಹನುಮಂತ, ಲಕ್ಷ್ಮಣ, ಹುಸೇನಪ್ಪ ಇದ್ದರು.