ಸಿರಿಗೆರೆ: ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸ ಶಿಕ್ಷಕರು ಮಾಡಬೇಕು ಎಂದು ರಾಜ್ಯ ಸಂಪನ್ಮೂಲ ವ್ಯಕ್ತಿ ಏಕನಾಥ ತಿಳಿಸಿದರು.
ಗ್ರಾಮದ ನೀಲಾಂಬಿಕಾ ಬಾಲಿಕಾ ಪ್ರೌಢಶಾಲೆ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿ, ಏಕಾಗ್ರತೆ ವಿದ್ಯಾರ್ಥಿ ಜೀವನದಲ್ಲಿ ಅತ್ಯಮೂಲ್ಯ. ಇದನ್ನು ಸಂಪಾದಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದರು.
ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಜಿ.ಮಂಜುನಾಥ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಉತ್ತಮ ಫಲಿತಾಂಶದೊಂದಿಗೆ ಶಾಲೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದು ತಿಳಿಸಿದರು.
ಪ್ರಭಾರ ಮುಖ್ಯಶಿಕ್ಷಕ ಎಂ.ಎಸ್.ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಕ್ರೀಡಾ ಚಾಂಪಿಯನ್ ಬಿ.ಭೂಮಿಕಾ, ಅರ್ಚನಾ ಹಾಗೂ ವಿ.ಎಚ್.ಕೀರ್ತಿ ಅವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ನಯನಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ರುಖೈಯಾ ತರನಮ್ ಸ್ವಾಗತಿಸಿದರು. ಕೆ.ನಿತ್ಯಾ ವಾರ್ಷಿಕ ವರದಿ ವಾಚಿಸಿದರು. ಪೂಜಾ, ಕಾವ್ಯಾ ಮತ್ತು ಐಶ್ವರ್ಯಾ ಬಹುಮಾನ ವಿತರಣಾ ಕಾರ್ಯಕ್ರಮ ನಿರ್ವಹಿಸಿದರು. ಎನ್.ಅರ್ಚನಾ ನಿರೂಪಿಸಿದರು.