ಬೆಳಗಾವಿ: ಕಳ್ಳಬಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಅಬಕಾರಿ ಹಾಗೂ ಪೊಲಿಸ್ ಅಧಿಕಾರಿಗಳು ಗುರುವಾರ ದಾಳಿ ನಡೆಸಿ 50 ಸಾವಿರ ರೂ. ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಹುಲ್ಯಾನೂರು ಮತ್ತು ಬುಡ್ರ್ಯಾನೂರು ಅರಣ್ಯ ಪ್ರದೇಶದಲ್ಲಿ ಕಳ್ಳಬಟ್ಟಿ ಮದ್ಯ ತಯಾರಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳು ಹಾಗೂ ಮಾರಿಹಾಳ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಈ ದಾಳಿ ವೇಳೆ ಕಳ್ಳಬಟ್ಟಿ ಮದ್ಯ ತಯಾರಿಸುತ್ತಿದ್ದವರು ಪರಾರಿಯಾಗಿದ್ದು, ಮದ್ಯ ತಯಾರಿಕೆಗೆ ಬಳಸಲಾಗುತ್ತಿದ್ದ ಕಚ್ಚಾವಸ್ತುಗಳು, ಬ್ಯಾರಲ್ ಹಾಗೂ ಬೆಲ್ಲವನ್ನು ವಶಕ್ಕೆ ಪಡೆಯಲಾಗಿದೆ. ಮಾರಿಹಾಳ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ವಿಜಯಕುಮಾರ ಸಿನ್ನೂರ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.